-ಮೇಲ್ವಿಚಾರಕಿ ಮರಾಠಿ ಲಕ್ಷ್ಮೀದೇವಿ ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಅನ್ನೇಹಾಳ್, ಜಂಪಯ್ಯನಹಟ್ಟಿಯ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿ ಅಸ್ವಸ್ಥಗೊಂಡ ಘಟನೆಗೆ ಸಂಬಂಧ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಮರಾಠಿ ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ.ಅನ್ನೇಹಾಳ್, ಜಂಪಯ್ಯನಹಟ್ಟಿಯ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕಳೆದ ಜುಲೈ 12ರಂದು ರಾತ್ರಿ ಊಟ ಸೇವನೆ ಬಳಿಕ 8 ರಿಂದ 9 ಮಕ್ಕಳಿಗೆ ಎದೆ ಉರಿ, ಹೊಟ್ಟೆಯಲ್ಲಿ ಉರಿ ಹಾಗೂ ವಾಂತಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಇವರಿಗೆ ಗೊಡಬನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಮಕ್ಕಳು ಗುಣಮುಖರಾಗಿದ್ದರು. ಆರೋಗ್ಯ ಸುರಕ್ಷತಾ ಅಧಿಕಾರಿಗಳು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಕ್ಕಳಿಗೆ ಶುದ್ಧ ಕುಡಿವ ನೀರು, ಕಾಯಿಸಿ ಆರಿಸಿದ ನೀರನ್ನು ಕೊಡಬೇಕು, ನಿಲಯದಲ್ಲಿ ಕೆಟ್ಟಿರುವ ವಾಟರ್ ಪ್ಯೂರಿಫೈಯರ್ ದುರಸ್ತಿಪಡಿಸಲು ಸೂಚನೆ ನೀಡಿದ್ದರು, ಘಟನೆ ಬಗ್ಗೆ ನಿಲಯದ ವಾರ್ಡನ್ ಅವರಿಗೆ ಸಮಾಜಾಯಿಷಿ ನೀಡುವಂತೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ವರದಿಯನ್ವಯ ಜಂಪಯ್ಯನಹಟ್ಟಿ ಹಾಸ್ಟೆಲ್ನ ಮೇಲ್ವಿಚಾರಕರಾದ ಮರಾಠಿ ಲಕ್ಷ್ಮೀದೇವಿ ಅವರ ವಿರುದ್ಧದ ಇಲಾಖಾ ವಿಚಾರಣೆ, ಶಿಸ್ತು ಕ್ರಮವನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.
-----