ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕಾಂಗ್ರೆಸ್ನಿಂದ ಹಿಂದುಳಿದ ವರ್ಗಗಳಿಗೆ ಉತ್ತಮ ಭವಿಷ್ಯವಿದೆ. ಹಿಂದುಳಿದ ಸಮುದಾಯಗಳನ್ನು ಮುಖ್ಯವಾಹಿನಿಗೆ ಕರೆತರಲು ಹಲವು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ ಎಂದು ಮಂಡ್ಯ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಹಳುವಾಡಿ ವೆಂಕಟೇಶ್ ಹೇಳಿದರು.ಏ.26 ರಂದು ನೆಡೆಯುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ, ಸೋಮನಹಳ್ಳಿ, ಅಂಬಿಗರಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ನಿರಂತರವಾಗಿ ಜನರ ಬದುಕು ಕಟ್ಟಿಕೊಡಲು ಪ್ರಯತ್ನ ಪಟ್ಟ ಪಕ್ಷ. ಈ ಪಕ್ಷದ ಯೋಜನೆಗಳ ವಿಚಾರಗಳನ್ನು ಗ್ರಾಮೀಣ ಮಟ್ಟದಲ್ಲಿ ತೆಗೆದುಕೊಂಡು ಹೋಗುವ ಕಾರ್ಯ ಆಗಬೇಕು. ರಾಜ್ಯದ ಐದು ಗ್ಯಾರಂಟಿಗಳು ಜನರ ಜೀವನ ಮಟ್ಟವನ್ನು ಸುಧಾರಿಸಿವೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿರುವ ಎಲ್ಲ ಗ್ಯಾರಂಟಿಗಳು ಕಾರ್ಯಗತವಾಗಲಿವೆ. ಯುವ ನ್ಯಾಯದ ಮೂಲಕ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ನಾರಿ ನ್ಯಾಯದ ಮೂಲಕ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರು. ಸಹಾಯ ಸಿಗಲಿದೆ. ರೈತರು ಸೇರಿದಂತೆ ಸರ್ವ ಜನರಿಗೂ ನ್ಯಾಯ ಸಿಗಲಿದೆ ಎಂದರು.ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ದೇಶಕ್ಕೆ ಕಾಂಗ್ರೆಸ್ ಆಡಳಿತದ ಅಗತ್ಯವಿದೆ. ಪುನಃ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ತಿದ್ದುಪಡಿ ಮಾಡಿ ಹಿಂದುಳಿದ ವರ್ಗಕ್ಕೆ ನೀಡುವ ಎಲ್ಲ ಯೋಜನೆಗಳನ್ನು ರದ್ದತಿ ಮಾಡುತ್ತಾರೆ.ಜನರು ಜಾಗೃತರಾಗಿರಬೇಕು ಎಂದರು.
ಈ ಕಾರಣದಿಂದ ಮಡಿವಾಳ ಸಮುದಾಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.ಮುಖಂಡರಾದ ಎನ್.ಸೋಮಶೇಖರ್, ಕೋಲಕಾರನದೊಡ್ಡಿ ಚನ್ನೇಗೌಡ ಸೇರಿದಂತೆ ಇತರರು ಹಾಜರಿದ್ದರು.