ಸುರತ್ಕಲ್‌, ಉಳ್ಳಾಲ ಒಳಚರಂಡಿ ವ್ಯವಸ್ಥೆ ತ್ವರಿತ ಕಾಮಗಾರಿಗೆ ಸದನ ಸಮಿತಿ ಸೂಚನೆ

KannadaprabhaNewsNetwork |  
Published : Sep 25, 2025, 01:02 AM IST
ವಿಧಾನ ಪರಿಷತ್‌ ಸರ್ಕಾರಿ ಭರವಸೆಗಳ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿರ್‌ ಅಧ್ಯಕ್ಷ ಶರವಣ ಟಿ.ಎ. ನೇತೃತ್ವದ ಸಮಿತಿಯು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ (ಯು.ಜಿ.ಡಿ)ಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಸಮಿತಿ ಅಧ್ಯಕ್ಷ ಶರವಣ ಟಿ.ಎ. ನೇತೃತ್ವದ ಸಮಿತಿಯು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿತು.

ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಯು.ಜಿ.ಡಿ. ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ, ಇನ್ನೂ ಪೂರ್ಣಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಮಿತಿಯು, ಇದಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಮುಂದಿನ 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿತು. ಯೋಜನೆ ಜಾರಿಗೊಳಿಸಲು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿತು.ಕೆಯುಐಡಿಎಫ್‌ಸಿ ಅಧಿಕಾರಿಗಳು ಸಭೆಯಲ್ಲಿ ಸಮಿತಿ ಮುಂದೆ ಯೋಜನೆ ವಿಳಂಬದ ಕಾರಣ ವಿವರಿಸಿದರು. ಒಳಚರಂಡಿ ಮನೆ ಮನೆ ಸಂಪರ್ಕಕ್ಕೆ ಹೆಚ್ಚುವರಿ 22 ಕೋಟಿ ರು. ಅನುದಾ‌ನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸುರತ್ಕಲ್ ವಲಯದಲ್ಲಿ ಒಳಚರಂಡಿ ಕಾಮಗಾರಿಯಲ್ಲಿ 116 ಕಿ.ಮೀ. ಪೈಪ್ ಲೈನ್ ಹಾಗೂ 824 ಮ್ಯಾನ್ ಹೋಲ್‌ಗಳನ್ನು ಮಾಡಲಾಗಿದೆ. ಇಲ್ಲಿನ ಬಹುತೇಕ ಪ್ರದೇಶಗಳಲ್ಲಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ವಿವರಿಸಿದರು.

ಈ ಎರಡೂ ಒಳಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗಮನಹರಿಸಿ, ಮುಂದಿನ 15 ದಿನಗಳೊಳಗೆ ವರದಿ ನೀಡುವಂತೆ ಸಮಿತಿಯ ಅಧ್ಯಕ್ಷ ಶರವಣ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.ಮಾಲಿನ್ಯ ನಿಯಂತ್ರಣ ಮಂಡಳಿಯು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಕೆರೆಗಳ ಸಂರಕ್ಷಣೆ, ನೀರು ಮಾಲಿನ್ಯದಂತಹ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸಲು ಸಮಿತಿಯು ಮಂಡಳಿಗೆ ಸೂಚಿಸಿತು. ನ್ಯಾಯಾಲಯದಲ್ಲಿರುವ ಪ್ರಕರಣಗಳಲ್ಲಿ ಸಮರ್ಥವಾಗಿ ದಾಖಲೆಗಳನ್ನು ಮಂಡಿಸಬೇಕು ಎಂದು ಸೂಚಿಸಿತು. ಮಾಲಿನ್ಯ ಮಂಡಳಿಗೆ ಪ್ರತ್ಯೇಕ ಕಾನೂನು ಕೋಶ ಒದಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದ 3 ಪ್ರಕರಣ ಹಾಗೂ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ 1 ಪ್ರಕರಣವು ರಾಷ್ಟ್ರೀಯ ಹಸಿರು ಪೀಠ (ಎನ್.ಜಿ.ಟಿ)ದ ಮುಂದೆ ಇದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸಮಿತಿಗೆ ವಿವರಿಸಿದರು.ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ತೆರೆಯಲು ಅಗತ್ಯ ಜಾಗ ಒದಗಿಸಲು ಅಧ್ಯಕ್ಷರು ಮಹಾನಗರ ಪಾಲಿಕೆಗೆ ಸೂಚಿಸಿದರು.ಸಭೆಯಲ್ಲಿ ವಿಧಾನಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿಯ ಸದಸ್ಯರಾದ ಮಂಜುನಾಥ ಭಂಢಾರಿ, ಪ್ರತಾಪ ಸಿಂಹ ನಾಯಕ್, ಡಿ.ಎಸ್‌. ಅರುಣ್, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮತ್ತಿತರರು ಇದ್ದರು. ಇದಕ್ಕೂ ಮೊದಲು ಸಮಿತಿಯು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಸರ್ಕಾರಿ ಭರವಸೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಅನುಷ್ಠಾನ ಕುರಿತು ಸಭೆ ನಡೆಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ