ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ

KannadaprabhaNewsNetwork |  
Published : May 05, 2025, 12:47 AM ISTUpdated : May 05, 2025, 07:20 AM IST
Vidhan soudha

ಸಾರಾಂಶ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ದಾಸ್‌ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ-ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.

  ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ದಾಸ್‌ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ-ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.

ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಪರಿಶಿಷ್ಟ ಜಾತಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆಯನ್ನು (ಡೋರ್‌ ನಂಬರ್) ಆ್ಯಪ್‌ನಲ್ಲಿ ನಮೂದಿಸಿ ಕುಟುಂಬದಲ್ಲಿನ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದಿಂದ ಮಾತ್ರ ಪರಿಶಿಷ್ಟ ಜಾತಿ, ಉಪಜಾತಿ ಹೆಸರು, ಕುಟುಂಬ ಸದಸ್ಯರ ವಿವರ, ವೃತ್ತಿ, ಶಿಕ್ಷಣ, ಸಾರ್ವಜನಿಕ ಉದ್ಯೋಗದ ಪ್ರಾತಿನಿಧ್ಯತೆ, ಸಾಮಾಜಿಕ ಸ್ಥಿತಿಗತಿ ಕುರಿತ ವಿವಿಧ ದತ್ತಾಂಶಗಳ ಬಗ್ಗೆ ಆ್ಯಪ್‌ ಮೂಲಕ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ವೇಳೆ ಯಾವುದೇ ಮನೆ ಮೇಲೂ ನಿರ್ದಿಷ್ಟವಾದ ಕಡ್ಡಾಯ ಗುರುತು ಮಾಡುವುದಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್‌ ಹೇಳಿದ್ದಾರೆ.ಮೊದಲು ಮನೆ-ಮನೆಗೆ ಭೇಟಿ ನೀಡುವ ಗಣತಿದಾರರು ಬಾಗಿಲ ಮೇಲೆ ಗುರುತು ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಆದರೆ ಇದು ದುರ್ಬಳಕೆ ಆಗುವ ಸಾಧ್ಯತೆ ಇತ್ತು. ಹೀಗಾಗಿ ಬೇರೆ ಬೇರೆ ಕಾರಣಗಳಿಗೆ ಪ್ರಸ್ತಾಪ ಕೈಬಿಟ್ಟಿದ್ದೇವೆ. ಮತಗಟ್ಟೆ ಮಾಹಿತಿ ಆಧಾರದ ಮೇಲೆ ಮನೆ-ಮನೆಗೂ ಭೇಟಿ ನೀಡಿಯೇ ಸಮೀಕ್ಷೆ ನಡೆಸಲು ಸ್ಪಷ್ಟ ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದ್ದಾರೆ.ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಮಾತ್ರ ಸಮೀಕ್ಷೆ:

ಗಣತಿದಾರರು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಮಾತ್ರ ಸಮೀಕ್ಷೆ ನಡೆಸಬೇಕು. ರಾತ್ರಿ ವೇಳೆ ಒಂದು ಕಡೆ ಕೂತು ಎಲ್ಲಾ ಮನೆಗಳ ವಿವರ ದಾಖಲಿಸಲು ಸಾಧ್ಯವಿಲ್ಲ. ಸಂಜೆ 6 ಗಂಟೆಗೆ ಆ್ಯಪ್‌ ತನ್ನಿಂತಾನೇ ಆಫ್‌ ಆಗಲಿದೆ. ಬಳಿಕ ಮರು ದಿನ ಬೆಳಗ್ಗೆ 6ಕ್ಕೆ ಸಮೀಕ್ಷೆ ದತ್ತಾಂಶ ದಾಖಲಿಸಲು ತೆರೆದುಕೊಳ್ಳಲಿದೆ.ಇನ್ನು ಪ್ರತಿ 10 ಮಂದಿ ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಅವರು ಗಣತಿದಾರರು ಸಮೀಕ್ಷೆ ನಡೆಸಿರುವ ಮನೆಗಳಿಗೆ ರ್‍ಯಾಂಡಮ್ ಆಗಿ ಭೇಟಿ ನೀಡಿ ಮರುಪರಿಶೀಲನೆ ನಡೆಸಲಿದ್ದಾರೆ. ಹೀಗಾಗಿ ಯಾವುದೇ ರೀತಿಯಲ್ಲೂ ಗಣತಿದಾರರು ನಿರ್ಲಕ್ಷ್ಯ ಮಾಡಲು ಅವಕಾಶ ನೀಡುವುದಿಲ್ಲ ಎಂದು ನಾಗಮೋಹನ್‌ದಾಸ್‌ ಅವರು ವಿವರಣೆ ನೀಡಿದರು.

ಮೇ 5 ರಿಂದ ಮೇ 17ರವರೆಗೆ ಮನೆ-ಮನೆ ಸಮೀಕ್ಷೆ ನಡೆಸಲಾಗುತ್ತದೆ. ಈ ವೇಳೆ ತಪ್ಪಿ ಹೋಗಿರುವವರು ತಮ್ಮ ವಿವರ ಘೋಷಿಸಲು ಪಂಚಾಯಿತಿ ಮಟ್ಟದಲ್ಲಿ ಮೇ 19 ರಿಂದ 21ರವರೆಗೆ ಮೂರು ದಿನಗಳ ಕಾಲ ತಾತ್ಕಾಲಿಕ ಶಿಬಿರ ಕೇಂದ್ರಕ್ಕೆ ಭೇಟಿ ನೀಡಬಹುದು.ಇನ್ನು ಮನೆ-ಮನೆ ಸಮೀಕ್ಷೆ ಹಾಗೂ ಶಿಬಿರ ಕೇಂದ್ರಕ್ಕೂ ಭೇಟಿ ನೀಡಲಾಗದೆ ಹೊರ ಪ್ರದೇಶದಲ್ಲಿ ವಾಸವಾಗಿರುವವರ ಅನುಕೂಲಕ್ಕಾಗಿ ಆನ್‌ಲೈನ್‌ ಮೂಲಕ ದತ್ತಾಂಶ ನೀಡಲು ಅವಕಾಶ ಕಲ್ಪಿಸಲಾಗಿದೆ. ಅಂಥವರು ಮೇ 19 ರಿಂದ ಮೇ 23ರವರೆಗೆ ಆನ್‌ಲೈನ್‌ ಮೂಲಕ ತಮ್ಮ ಉಪ ಜಾತಿ ಹಾಗೂ ವಿವರ ಘೋಷಿಸಿಕೊಳ್ಳಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ