ಸಮೀಕ್ಷೆಗೆ ಚಿತ್ರದುರ್ಗದಲ್ಲಿ 4,62,280 ಮನೆ ಗುರುತು

KannadaprabhaNewsNetwork |  
Published : Sep 23, 2025, 01:03 AM IST
ಚಿತ್ರದುರ್ಗ ಎರಡನೇ ಪುಟದ  ಲೀಡ್ (ಇದನ್ನೇ ಬಳಸಿ) | Kannada Prabha

ಸಾರಾಂಶ

ಜಿಲ್ಲಾ ಉಸ್ತುವಾರ ಸಚಿವ ಡಿ.ಸುಧಾಕರ್ ಸೋಮವಾರ ಚಿತ್ರದುರ್ಗದ ಬುದ್ದ ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ । ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಜಿಲ್ಲೆಯಾದ್ಯಂತ ಸೋಮವಾರ ಆರಂಭವಾಗಿದ್ದು ಇದಕ್ಕಾಗಿ 4,62,280 ಮನೆ ಗುರುತು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಬುದ್ಧನಗರದಲ್ಲಿ ಅಧಿಕಾರಿಗಳು ಹಾಗೂ ಗಣತಿದಾರರೊಂದಿಗೆ ಮನೆ ಭೇಟಿ ನೀಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರವು ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ, ರಾಜ್ಯಾದ್ಯಂತ ಕಾರ್ಯ ಪ್ರಾರಂಭವಾಗಿದೆ. ರಾಜ್ಯದಲ್ಲಿ ಜಾತಿ ಗಣತಿ ಮಾಡುತ್ತಿಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಅಂಕಿ-ಅಂಶಗಳ ಮೂಲಕ ಸಂಗ್ರಹಿಸುವುದು, ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದೇ ಸಮೀಕ್ಷೆಯ ಉದ್ದೇಶವಾಗಿದೆ ಎಂದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 4,62,280 ಮನೆಗಳನ್ನು ಗುರುತಿಸಲಾಗಿದ್ದು, ಒಟ್ಟು 3768 ಗಣತಿದಾರರು, 376 ಮೇಲ್ವಿಚಾರಕರು, 92 ಮಾಸ್ಟರ್ ಟ್ರೈನರ್ಸ್‍ಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷೆಯಲ್ಲಿ ಒಟ್ಟು 60 ಪ್ರಶ್ನಾವಳಿಗಳು ಕೇಳಿದ್ದು, ಮುಖ್ಯವಾಗಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಮೀಕ್ಷೆಯ ಬಗ್ಗೆ ಅರಿವು ಮೂಡಿಸಲು ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಎನ್‍ಆರ್‍ಎಲ್‍ಎಂ ಮೂಲಕ ಮನೆಗಳಿಗೆ ಭೇಟಿ ನೀಡಿ ಕುಟುಂಬ ಅನುಸೂಚಿ ನಮೂನೆಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ. ಒಟ್ಟು 4,31,000 ಕುಟುಂಬ ಅನುಸೂಚಿಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಲಾಗಿದ್ದು, ಮನೆಗಳಿಗೆ ನಮೂನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದರು.

ಗಣತಿದಾರರಿಗೆ ಒಟ್ಟು 3491 ಕೈಪಿಡಿಗಳನ್ನು ವಿತರಣೆ ಮಾಡಲಾಗಿದೆ. ಗಣತಿದಾರರಿಗೆ ಅವಶ್ಯವಾಗಿ ಬೇಕಾಗಿರುವ ಗುರುತಿನ ಚೀಟಿಗಳನ್ನು ಮತ್ತು ಟೋಪಿಗಳನ್ನು ವಿತರಣೆ ಮಾಡಲಾಗಿದೆ. ಕುಟುಂಬದ ಸದಸ್ಯರು, ಮುಖ್ಯಸ್ಥರಿಂದ ಸಮೀಕ್ಷೆಗೆ ಮಾಹಿತಿ ಪಡೆದ ನಂತರ ಪಡೆಯಬೇಕಾದ ಸ್ವಯಂ ದೃಢೀಕರಣ ಪತ್ರಗಳನ್ನು ಗಣತಿದಾರರಿಗೆ ಜಿಲ್ಲಾಡಳಿತದಿಂದ ವಿತರಣೆ ಮಾಡಲಾಗಿದೆ. ಸಮೀಕ್ಷಾ ಕಾರ್ಯವು ಸೆ.22 ರಿಂದ ಅ.07 ರವರೆಗೆ ಜಿಲ್ಲಾಧಿಕಾರಿಗಳ ಮುಂದಾಳತ್ವದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಅನಿತಾ ರಮೇಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಗೋವಿಂದರಾಜು, ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಪೌರಾಯುಕ್ತೆ ಲಕ್ಷ್ಮಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಗಣತಿದಾರರು ಇದ್ದರು.

PREV

Recommended Stories

ಅಕ್ರಮ ಶಸ್ತ್ರಾಸ್ತ್ರ: ನಿನ್ನೆಯೂ ವಿಚಾರಣೆಗೆ ತಿಮರೋಡಿ ಗೈರು
ಸಿದ್ದು ಆಳ್ವಿಕೆ ಟಿಪ್ಪು ಆಳ್ವಿಕೆ ನಾಚಿಸುವಂತಿದೆ : ಬಿವೈವಿ