ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಹೊರವಲಯದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮನ್ನು ಬಿಜೆಪಿ ನಾಯಕರು ಸಂಪರ್ಕಿಸಿದ ಬಗ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರಿಗೆ ವಿವರಿಸಿದ್ದೇನೆ. ನಾನು ಕಾಂಗ್ರೆಸ್ ಪಕ್ಷದಲ್ಲಿ 25 ವರ್ಷಗಳ ಕಾಲ ಶಾಸಕನಾಗಿ, ವಿಧಾನಸಭೆಯ ಉಪಾಧ್ಯಕ್ಷನಾಗಿ, ಕೃಷಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಶ್ರಮವಹಿಸಿ ದುಡಿದಿದ್ದೇನೆ ಎಂದರು.
ಜಿಲ್ಲೆಯಲ್ಲಿ ಎಲ್ಲಾ ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ, ಇಷ್ಟೆಲ್ಲಾ ದುಡಿದ ನನ್ನನ್ನೇ ನಿರ್ಲಕ್ಷಿಸಿದರೆ ಹೇಗೆ? ಎಂದು ಕಾಂಗ್ರೆಸ್ ನಾಯಕರಿಗೆ ಶಿವಶಂಕರರೆಡ್ಡಿ ಪ್ರಶ್ನೆ ಮಾಡಿದರು.ಬರುವ ಲೋಕಸಭಾ ಚುನಾವಣೆಯಲ್ಲಿ ನಾನೂ ಸಹ ಆಕಾಂಕ್ಷಿಯಾಗಿದ್ದೇನೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಹೈಕಮಾಂಡ್ ಗೆ ಒಬ್ಬರ ಹೆಸರು ಮಾತ್ರ ಹೋಗಿಲ್ಲ. ಬದಲಾಗಿ ಮೂವರು ಆಕಾಂಕ್ಷಿಗಳ ಹೆಸರು ಹೋಗಿದೆ. ಅದರಲ್ಲಿ ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತ್ತು ನನ್ನ ಹೆಸರೂ ಹೋಗಿದೆ. ನಾನೂ ಕೂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್.ಪುಟ್ಟಸ್ವಾಮಿ ಗೌಡ ವಿರುದ್ಧ ಸೋತ ಬಳಿಕ ಎನ್.ಎಚ್.ಶಿವಶಂಕರರೆಡ್ಡಿ ಕಾಂಗ್ರೆಸ್ ನಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದರು. ಆದರೆ ಬಿಜೆಪಿ ನಾಯಕರು ಅವರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡುವ ಭರವಸೆ ನೀಡಿದ್ದರು.
ವರ್ಗಾವಣೆ, ನಿಗಮ ಮಂಡಳಿ, ನಾಮ ನಿರ್ದೇಶನಗಳಲ್ಲಿ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಬೆಂಬಲಿಗರಿಗೆ ಕಾಂಗ್ರೆಸ್ ನಾಯಕರು ಹೆಚ್ಚಿನ ಅವಕಾಶ ಕಲ್ಪಿಸಿಕೊಡುತ್ತಿರುವುದು ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿತ್ತು.ಈ ವೇಳೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮಾಜಿ ಸಚಿವ ವಿ.ಮುನಿಯಪ್ಪ,ಮಾಜಿ ಶಾಸಕ ಎನ್.ಸಂಪಂಗಿ, ಮಾಜಿ ಜಿಪಂ ಅಧ್ಯಕ್ಷ ಗಂಗರೇ ಕಾಲುವೆ ನಾರಾಯಣಸ್ವಾಮಿ ಮತ್ತಿತರರು ಇದ್ದರು.