ಮೂಡುಬಿದಿರೆ: ಗರ್ಭಕಂಠದ ಕ್ಯಾನ್ಸರ್ಗೆ ಪ್ರಮುಖ ಕಾರಣವಾಗಿರುವ ಎಚ್ಪಿವಿ ಸೋಂಕನ್ನು ತಡೆಗಟ್ಟುವಲ್ಲಿ ಎಚ್ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿ ಎಂದು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ತಿಳಿಸಿದರು. ತಿಳಿಸಿದ್ದಾರೆ.
2006ರಿಂದ ಬಳಕೆಯಲ್ಲಿರುವ ಎಚ್ಪಿವಿ ಲಸಿಕೆಯು ವೈರಸ್ ಸೋಂಕಿನಿಂದ ದೇಹವನ್ನು ರಕ್ಷಿಸುವ ಮೂಲಕ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಉಂಟಾಗುವ ಅಪಾಯ ಗಣನೀಯವಾಗಿ ಕಡಿಮೆ ಮಾಡುತ್ತದೆ. ಹೆಣ್ಣು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಲಸಿಕೆಯನ್ನು ಸರ್ಕಾರದ ವತಿಯಿಂದ ಮೊದಲ ಬಾರಿಗೆ ಉಚಿತವಾಗಿ ನೀಡಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿನಿಯೂ ಈ ಅವಕಾಶದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಡಾ. ಅಕ್ಷತಾ ನಾಯಕ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.ಸಂಸ್ಥೆಯ ಆಡಳಿತ ನಿರ್ದೇಶಕ ಸಂಪತ್ ಕುಮಾರ್ ಮಾತನಾಡಿ, ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತು ಎಂಬ ಧ್ಯೇಯದೊಂದಿಗೆ ಎಕ್ಸಲೆಂಟ್ ಸಂಸ್ಥೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುತ್ತಿದೆ. ನಿಯಮಿತ ದೈಹಿಕ ವ್ಯಾಯಾಮ, ಆರೋಗ್ಯಕರ ಜೀವನಶೈಲಿ ಹಾಗೂ ಸ್ವಚ್ಛತೆ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ, ಕೇಂದ್ರ ಸರ್ಕಾರದ ಎಚ್ಪಿವಿ ಲಸಿಕೆ ಕುರಿತು ವಿದ್ಯಾರ್ಥಿನಿಯರು ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಕೈಗೊಂಡಿದ್ದು, ಎಲ್ಲ ಅರ್ಹ ವಿದ್ಯಾರ್ಥಿನಿಯರೂ ಲಸಿಕೆಯ ಪ್ರಯೋಜನ ಪಡೆದು ಆರೋಗ್ಯಕರ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.