ಶಿವಾನಂದ ಗೊಂಬಿ
ಇವೆಲ್ಲವುಗಳ ಮಧ್ಯೆ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಯೋಜನೆಗೆ ಸಂಬಂಧಪಟ್ಟಂತೆ ಕೇಂದ್ರ ಮಂಜೂರಾತಿ ನೀಡಿದೆನ್ನಲಾದ ಹೇಳಿಕೆ ಅತ್ತ ಉತ್ತರ ಕನ್ನಡ ಇತ್ತ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದೆ. ಅಬ್ಬಾ ಕೊನೆಗೂ ಮಂಜೂರಾತಿ ದೊರೆಯುವ ಕಾಲ ಸನ್ನಿಹಿತವಾಯಿತಲ್ಲ ಎಂದು ಹೋರಾಟಗಾರರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಏನದು ಹೋರಾಟ?: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದಿಂದ ಸಾಕಷ್ಟು ಅನುಕೂಲಗಳಿವೆ. ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿದಂತಾಗಿದೆ. ಪ್ರಾದೇಶಿಕ ಅಸಮಾನತೆ ದೂರವಾಗುತ್ತದೆ. ಉದ್ಯೋಗ ಅವಕಾಶಗಳು ಹೆಚ್ಚಾಗುತ್ತವೆ. ಇದು ಸತ್ಯ ಕೂಡ. ಇಲ್ಲಿನ ಜನರ ಬೇಡಿಕೆಗಳಿಗೆ ಮನ್ನಣೆ ನೀಡಿ 1999ರಲ್ಲೇ ಅಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಶಂಕು ಸ್ಥಾಪನೆ ನೆರವೇರಿಸಿದ್ದರು. ಆಗ ಯೋಜನೆಯ ವೆಚ್ಚ ₹494 ಕೋಟಿ ಎಂದು ಅಂದಾಜಿಸಲಾಗಿತ್ತು. ಆದರೆ, ಈ ಯೋಜನೆಯಿಂದ ಅರಣ್ಯನಾಶವಾಗುತ್ತದೆ. ಯೋಜನೆಯಿಂದ ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದ ಈ ಪ್ರದೇಶದಲ್ಲಿ ವನ್ಯ ಜೀವಿಗಳಿಗೆ ತೊಂದರೆಯಾಗಲಿದೆ ಎಂಬುದು ಪರಿಸರವಾದಿಗಳು ವಾದಿಸುತ್ತಲೇ ಬಂದಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ವನ್ಯಜೀವಿ ಮಂಡಳಿಯ ತಂಡ 2025ರ ಜನವರಿಯಲ್ಲಿ ಖುದ್ದು ಸಮೀಕ್ಷೆ ನಡೆಸಿ ಪ್ರಾಣಿಗಳ ಸಂಚಾರ, ಸಸ್ಯ ಸಂಕುಲ ಹಾಗೂ ಅಳಿವಿನ ಅಂಚಿನಲ್ಲಿರುವ ಈ ಪ್ರದೇಶದ ಸಸ್ಯ ಪ್ರಭೇದಗಳ ಮಾಹಿತಿಯನ್ನೂ ಕಲೆಹಾಕಿ ವರದಿ ಸಲ್ಲಿಸಿದ್ದು ಆಗಿದೆ.
ಎಷ್ಟು ಕಿಮೀ?: ಈಗಿರುವ ರಾಷ್ಟ್ರೀಯ ಹೆದ್ದಾರಿ 263 ಪಕ್ಕದಲ್ಲೇ ಜೋಡಿ ಮಾರ್ಗ ನಿರ್ಮಾಣ ಮಾಡುವುದಾಗಿ ಡಿಪಿಆರ್ನಲ್ಲಿ ಹೇಳಿಕೊಳ್ಳಲಾಗಿದೆ. 163 ಕಿ.ಮೀ ಅಂತರದ ಈ ಮಾರ್ಗದಲ್ಲಿ 97 ಕಿ.ಮೀ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತದೆ. ಇದರಲ್ಲಿ ಅರಣ್ಯ ಪ್ರದೇಶದಲ್ಲಿ ಬಾರದ 47 ಕಿಮೀ ವ್ಯಾಪ್ತಿಯಲ್ಲಿ ಹುಬ್ಬಳ್ಳಿ- ಕಿರುವತ್ತಿ ಮಧ್ಯೆ ರೈಲು ಮಾರ್ಗ ಈಗಾಗಲೇ ಪೂರ್ಣಗೊಂಡಿದ್ದು ಆಗಿದೆ. ಈಗ ಉಳಿದೆಡೆ ಯೋಜನೆ ಕೈಗೆತ್ತಿಕೊಳ್ಳಲು ಅನುಮೋದನೆ ಸಿಗಬೇಕಿದೆ.