ಕಾರವಾರ: ಹಿಂದು ಫೈರ್ ಬ್ರಾಂಡ್, ಹಿಂದೂ ಹುಲಿ ಎಂದೆಲ್ಲ ಕರೆಸಿಕೊಂಡು ಸ್ವಯಂಕೃತಾಪರಾಧದಿಂದ ಲೋಕಸಭೆ ಟಿಕೆಟ್ ವಂಚಿತರಾದ ಅನಂತಕುಮಾರ ಹೆಗಡೆ ರಾಜಕೀಯವಾಗಿ ನೇಪಥ್ಯಕ್ಕೆ ಸರಿದು, ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಿ ಆಯ್ಕೆಯಾಗಿ ರಾಜಕೀಯ ಸಂಚಲನ ಸೃಷ್ಟಿಸಿದ ವರ್ಷ 2024.
ಕಾಂಗ್ರೆಸ್ಸಿನಿಂದಲೂ ಹೊಸ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಮಣೆ ಹಾಕಲಾಯಿತು. ಸಾಮಾಜಿಕ ಜಾಲತಾಣದ ಮೂಲಕ ಅಂಜಲಿ ನಿಂಬಾಳ್ಕರ್ ಅಬ್ಬರದ ಪ್ರಚಾರ ನಡೆಸಿದರೂ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಭಾರಿ ಮತಗಳ ಅಂತರದಿಂದ ಜಯಭೇರಿ ಗಳಿಸಿದರು. ಆ ಮೂಲಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತಕುಮಾರ ಹೆಗಡೆ ಅವರ ಅಧಿಪತ್ಯ ಕೊನೆಯಾಯಿತು. ಮೂರು ದಶಕಗಳಿಗೂ ಹೆಚ್ಚು ಕಾಲ ಬಿಜೆಪಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಅನಂತಕುಮಾರ ಹೆಗಡೆ 2024ರಲ್ಲಿ ರಾಜಕೀಯವಾಗಿ ತೆರೆಯ ಮರೆಗೆ ಸರಿಯುವಂತಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಐವರು ಶಾಸಕರಿದ್ದರು. ಬಿಜೆಪಿಯ ಮೂವರು ಶಾಸಕರಿದ್ದರು. ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದರು. ಆದರೂ ಬಿಜೆಪಿಯ ವಿಶ್ವೇಶ್ವರ ಹೆಗಡೆ ಗೆಲುವಿನ ನಗೆ ಬೀರಿದರು.ಸಂಸದರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲೆಯಾದ್ಯಂತ ಚುರುಕಿನಿಂದ ಓಡಾಡುತ್ತಿದ್ದಾರೆ. ಸೀಬರ್ಡ್ ನೌಕಾನೆಲೆ, ಕೈಗಾ ಅಣು ವಿದ್ಯುತ್ ಸ್ಥಾವರ, ಶಿರೂರು ದುರಂತ, ಚತುಷ್ಪಥ ಹೆದ್ದಾರಿ... ಹೀಗೆ ವಿವಿಧ ಯೋಜನೆಗಳಿಂದ ಉಂಟಾದ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.