ಕನ್ನಡಪ್ರಭ ವಾರ್ತೆ ಹುಕ್ಕೇರಿ
ಹಲವು ಬಾರಿ ಮುಂದೂಡಿಕೆಯಾಗಿ ಕೊನೆಗೂ ನಿಗದಿಯಾಗಿದ್ದ ಹುಕ್ಕೇರಿ ತಾಲೂಕು ಪಂಚಾಯತಿಯ 2022-23ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ, ತಾಪಂ ಆಡಳಿತಾಧಿಕಾರಿ ಸೇರಿದಂತೆ ತಾಲೂಕಿನ ಬಹುತೇಕ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಿಯಿಂದ ನೀರಸ ಎನಿಸಿತು.
ಕಾಟಾಚಾರಕ್ಕೆ ಎನ್ನುವಂತೆ ಕೆಲ ಇಲಾಖೆ ಅಧಿಕಾರಿಗಳು ತಮ್ಮ ಪ್ರತಿನಿಧಿಗಳನ್ನು ಕಳುಹಿಸುವ ಮೂಲಕ ಸಭೆಯ ಬಗ್ಗೆ ಅವರಿಗೆ ಗಂಭೀರತೆ ಇಲ್ಲ ಎನ್ನುವುದನ್ನು ಸಾಬೀತುಪಡಿಸಿದರು. ಬಹುನಿರೀಕ್ಷಿತ ಈ ಜಮಾಬಂದಿ ಸಭೆಯಲ್ಲಿದ್ದ ಬೆರಳಣಿಕೆಯಷ್ಟು ಅಧಿಕಾರಿ-ಸಿಬ್ಬಂದಿಯಲ್ಲಿ ಉತ್ಸಾಹವೇ ಕಂಡು ಬರಲಿಲ್ಲ.ಹುಕ್ಕೇರಿ ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಹಣಕಾಸಿನ ನಿರ್ವಹಣೆಯ ಮಹತ್ವದ ಲೆಕ್ಕಪತ್ರಕ್ಕೆ ಸಂಬಂಧಿಸಿದ ಜಮಾಬಂದಿ ಕಾರ್ಯಕ್ರಮವನ್ನು ತಾಪಂ ಅಧಿಕಾರಿ-ಸಿಬ್ಬಂದಿ ಹಗುರವಾಗಿ ಪರಿಗಣಿಸಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಬೇಕಾಯಿತು. ಸಭೆಗೆ ಆಗಮಿಸುವಂತೆ ವಿವಿಧ ಇಲಾಖೆಗಳನ್ನು ಸಮನ್ವಯ ಸಾಧಿಸುವಲ್ಲಿ ತಾಪಂ ಅಧಿಕಾರಿಗಳು ವಿಫಲರಾದರಾ? ಎಂಬ ಆರೋಪಗಳು ಕೇಳಿ ಬಂದವು.
ಸಹಾಯಕ ಲೆಕ್ಕಾಧಿಕಾರಿ ಆರ್.ಎನ್.ವಂಜೀರೆ ಅವರು ಸಭೆಯುದ್ದಕ್ಕೂ ಮುದ್ರಿಸಿಟ್ಟುಕೊಂಡಿದ್ದನ್ನು ಒಂದಕ್ಷರವೂ ಚಾಚೂತಪ್ಪದೇ ಕಂಠಪಾಠದಂತೆ ಓದಿದರು. ಇದಕ್ಕೆ ಸಭೆಯಲ್ಲಿದ್ದವರು ತಲೆದೂಗಿಸಿದರು. ಇದು ಗಿಳಿಪಾಠ ಕೇಳುತ್ತಿರುವ ಶಾಲಾ ಮಕ್ಕಳ ದೃಶ್ಯ ನೆನಪಿಸುವಂತಿತ್ತು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ, ಪ್ರಭಾರಿ ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ, ನೀಲಕಂಠ ಕುಲಕರ್ಣಿ ಮತ್ತಿತರರು ಇದ್ದರು.