ಕನ್ನಡಪ್ರಭ ವಾರ್ತೆ ಬೀದರ್
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.ಅವರು ಶುಕ್ರವಾರ ಬೀದರನ ಪ್ರತಾಪ ನಗರದಲ್ಲಿರುವ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಡಿಸಿದ ಸೆ.15 ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಅಂದು ಬಸವಕಲ್ಯಾಣ ಅನುಭವ ಮಂಟಪದಿಂದ ಚಾಮರಾಜ ನಗರದವರೆಗೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಇಲಾಖೆ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಇಲಾಖೆ, ಪೌರಾಡಳಿತ ಮತ್ತು ಹಜ್ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಹಯೋಗದಿಂದ ಯಶಸ್ವಿಯಾಗಿ ನಡೆಸಬೇಕು. ನಿಗದಿಪಡಿಸಿದ ಕಿಲೋ ಮೀಟರಗಳವರೆಗೆ ಶಾಲಾ-ಕಾಲೇಜಿನ ಮಕ್ಕಳನ್ನು ಬೆಳಗ್ಗೆ 8.30 ಗಂಟೆಗೆ ಸರಿಯಾದ ಸಮಯದಲ್ಲಿ ಇರುವಂತೆ ನೋಡಿಕೊಳ್ಳಬೇಕೆಂದರು.
ಅನುಭವ ಮಂಟಪದಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 45 ಕಿಮೀ. ಮಾನವ ಸರಪಳಿ ರಚಿಸುವುದರ ಜೊತೆಗೆ 1 ಕಿಮೀ. ಉದ್ದದ ರಾಜ್ಯ ಹಾಗೂ ರಾಷ್ಟ್ರ ಧ್ವಜ ಹಿಡಿದು ಮಕ್ಕಳು ಮುನ್ನಡೆಯುವರು. 1 ಕಿಮೀ. ಗೆ ಒಬ್ಬ ಅಧಿಕಾರಿ ನಿಯೋಜಿಸಲಾಗುವುದು ಇದರಲ್ಲಿ ಸಂವಿಧಾನದ ಪೀಠಿಕೆ ವಾಚನ ಇರುತ್ತದೆ ಹಾಗಾಗಿ ಬೀದರ್ ಜಿಲ್ಲೆಯ ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.ಜಿಪಂ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ರೋಟರಿ ಕ್ಲಬ್ ಸಂಘ-ಸಂಸ್ಥೆ ಪದಾಧಿಕಾರಿಗಳು, ಎನ್ಜಿಒಗಳು, ಸಾರ್ವಜನಿಕರು ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಚಂದ್ರಕಾಂತ ಪೂಜಾರ ಮಾತನಾಡಿ, ಮಾನವ ಸರಪಳಿ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡುವುದರ ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗುವುದು. ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಮುಂಜಾಗ್ರತೆಯಾಗಿ ಬಂದೋಬಸ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಲಾಖೆ ಉಪನಿರ್ದೇಶಕರಾದ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧು ಎಚ್.ಎಸ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಡಿಡಿಪಿಐ ಸಲೀಂ ಪಾಶಾ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿ ಮೋತಿಲಾಲ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಶಿಕ್ಷಣ ಇಲಾಖೆ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.