ಹೊಸಪೇಟೆ: ಮಾನವ ಜನ್ಮ ಮಹತ್ವವಾದದ್ದು, ನಮ್ಮಿಂದ ಇನ್ನೊಬ್ಬರ ಜೀವಕ್ಕೆ ತೊಂದರೆಯಾಗದ ರೀತಿಯಲ್ಲಿ ಬದುಕಿದಾಗ ಮಾತ್ರ ಜನ್ಮ ಸಾರ್ಥಕ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.ನಗರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ 37ನೇ ರಸ್ತೆ ಸುರಕ್ಷತಾ ಮಾಸಾಚರಣೆ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಎಚ್ಚರಿಕೆಯಿಂದ ರಸ್ತೆ ಸುರಕ್ಷತಾ ಮತ್ತು ಸಂಚಾರ ನಿಯಮ ಪಾಲಿಸಬೇಕು. ಮಾನವ ಜನ್ಮ ತುಂಬ ಅಮೂಲ್ಯವಾದುದು. ಮತ್ತೊಬ್ಬರ ಜೀವಕ್ಕೆ ತೊಂದರೆಯಾಗದ ರೀತಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಅನುಸರಿಸಿ ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ವಾಹನ ಚಾಲಕರು ದೂರದ ಪ್ರಯಾಣ ಮಾಡುವಾಗ ವಾಹನ ದುರಸ್ತಿಗೆ ಬಂದಾಗ ಕಲ್ಲು ಇನ್ನಿತರೆ ಉಪಕರಣ ಬಳಸಿ, ರಸ್ತೆಯಲ್ಲೇ ಬಿಟ್ಟು ತೆರಳುವರು. ಇದರಿಂದಾಗಿ ಹಲವು ಅಪಘಾತ ಸಂಭವಿಸಿವೆ. ಇದನ್ನರಿತು ಅಂತಹ ದೃಶ್ಯ ಕಂಡುಬಂದಲ್ಲಿ ಜಿಲ್ಲಾಧಿಕಾರಿಯಾಗಿ ಸ್ವತಃ ನಾನೇ ತೆರವುಗೊಳಿಸಿದ್ದೇನೆ ಎಂದು ಅವರು ಹೇಳಿದರು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ್, ಜಿಲ್ಲಾ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಸಿವಿಲ್ ನ್ಯಾಯಾಧೀಶೆ ಜೆ. ಚೈತ್ರ, 2ನೇ ಅಪರ ಸಿವಿಲ್ ನ್ಯಾಯಾಧೀಶೆ ಶೃತಿ ತೇಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ್ ನಾಗರಾಜ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ದೊಂಬರ್ ಮತ್ತೂರು, ಕೆಎಸ್ಆರ್ಟಿಸಿ ವಿಭಾಗೀಯ ಹಿರಿಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ್ ಉಪಸ್ಥಿತರಿದ್ದರು.
ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಪ್ರಬಂಧ, ಚಿತ್ರಕಲಾ ಹಾಗೂ ಭಾಷಣ ಸ್ಪರ್ಧೆ ಆಯೋಜಸಿಲಾಗಿದ್ದು, ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಿಸಲಾಯಿತು.ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಸಮಿತಿ ವತಿಯಿಂದ ಕಾರ್ಮಿಕರಿಗೆ ಎಲ್.ಎಲ್.ಆರ್ ಹಾಗೂ ಅಸಂಘಟಿತರಿಗೆ ಗುರುತಿನ ಚೀಟಿ ನೀಡಲಾಯಿತು.