ನೇತ್ರಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ - ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ ದಾರಿಯೆಡೆಗೆ ಸಾಗಲು ಸಾಧ್ಯ. ಇದು ಎಲ್ಲ ಧರ್ಮಗಳ ಸಾರ ಎಂಬುದನ್ನು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದಾರೆ. ಬಡವರು ಮತ್ತು ದೀನ ದಲಿತರ ಬಗ್ಗೆ ಅವರ ಚಿಂತನೆಗಳು ಗಮನ ಸೆಳೆಯುತ್ತವೆ. ಮಾನವೀಯ ಮೌಲ್ಯಗಳೇ ವಿವೇಕಾನಂದರು ಪ್ರತಿಪಾದಿಸಿದ ಮುಖ್ಯ ತತ್ವವಾಗಿದೆ. ಇದು ಜಾಗತಿಕ ಶಾಂತಿಗೆ ಕಾರಣವಾಗುತ್ತದೆ. ಈ ದೃಷ್ಟಿಯಿಂದ ವಿವೇಕಾನಂದರ ಚಿಂತನೆ ಹೆಚ್ಚು ಸಮಕಾಲೀನವಾಗಿದೆ ಎಂದು ಚಿಂತಕಿ ಡಾ. ನಿಕೇತನ ಪ್ರತಿಪಾದಿಸಿದ್ದಾರೆ.
ಅವರು ಶನಿವಾರ ನಗರದ ನೇತ್ರಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿವೇಕಾನಂದ ಜಯಂತಿ - ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಭಾರತೀಯ ಚಿಂತನೆ ಮತ್ತು ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದ, ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನೇತ್ರಜ್ಯೋತಿ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಗೌರಿ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ರೆಡ್ ಕ್ರಾಸ್ ಉಪ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ., ಖಜಾಂಚಿ ರಮಾದೇವಿ, ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಪ್ರಾಧ್ಯಾಪಕ ಶಹನಾಜ್, ಕಾಲೇಜಿನ ಸಂಯೋಜಕ ಸಚಿನ್ ಶೇಟ್ ಮತ್ತು ಮಾಧವ ಪೂಜಾರಿ, ರೆಡ್ ಕ್ರಾಸ್ ಸ್ವಯಂಸೇವಕಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ರಕ್ಷಾ ಸ್ವಾಗತಿಸಿ, ಸ್ವಾತಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.