ರಾಮನಗರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಶಿಕ್ಷಣದಲ್ಲಿ ಸುಧಾರಣೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ಸೂಚಿಸಿ ಜುಲೈ 27ರಂದು ನಗರದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷರು ಹಾಗೂ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕು:
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ದೇಶದಲ್ಲಿ 21 ವಿದ್ಯಾರ್ಥಿಗಳು ತಮ್ಮದಲ್ಲದ ತಪ್ಪಿಗೆ ಆತ್ಮಹತ್ಯೆ ಮಾಡಿಕೊಂಡರು. ಇದರಿಂದ ಆ ಕುಟುಂಬಗಳಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ. ಕಷ್ಟಪಟ್ಟು ವ್ಯಾಸಂಗ ಮಾಡಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಬದುಕು ಮೂರಾಬಟ್ಟೆಯಾಗಿದೆ. ಪೋಷಕರು ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉದ್ಧಟತನ ತೋರುತ್ತಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರು ಮೌನ ವಹಿಸಿರುವುದು ವಿದ್ಯಾರ್ಥಿಗಳಿಗೆ ಎಸಗುತ್ತಿರುವ ದ್ರೋಹ ಎಂದು ಟೀಕಿಸಿದರು.ಇನ್ನು ಪರಿಸರ ವಾದಿ ಮತ್ತು ಶಿಕ್ಷಣ ತಜ್ಞರಾದ ಸೋನಂ ವಾಂಗ್ಚುಕ್ ದೇಶದ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗಬೇಕೆಂದು ಕೇಂದ್ರ ಸರ್ಕಾರದ ಗಮನ ಸೆಳೆಯಲು 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಸತ್ಯಾಗ್ರಹಿಯ ಮನವೊಲಿಸುವ ಬದಲು ಬಲವಂತವಾಗಿ ಹೊತ್ತೊಯ್ದಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕು ಎಂದು ವಾಗ್ದಾಳಿ ನಡೆಸಿದರು.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಒಂದು ತಿಂಗಳಿಂದ ಜಂತರ್ ಮಂತರ್ ನಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ವಿದ್ಯಾರ್ಥಿ - ವಿದ್ಯಾರ್ಥಿನಿಯರ ಮೇಲೆ ಲಾಠಿ ಪ್ರಹಾರ ನಡೆಸಿ ಅನಾಗರಿಕರಂತೆ ವರ್ತಿಸಿದ್ದಾರೆ. ಹೆಲ್ಮೆಟ್ ಧರಿಸಿದ್ದ ಅನಧಿಕೃತ ಜನರು ಲಾಠಿ ಹಿಡಿದು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವುದು ಬರ್ಬರ ಕೃತ್ಯ ಎಂದು ಟೀಕಿಸಿದರು.
ಮಕ್ಕಳ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಮನಗರದಲ್ಲಿಯೂ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ವಾದಿಗಳು, ಪ್ರಗತಿಪರ ಸಂಘಟನೆಗಳು, ರೈತ,ದಲಿತ,ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸುವಂತೆ ಕೆ.ಶೇಷಾದ್ರಿ ಮನವಿ ಮಾಡಿದರು.
24ಕೆಆರ್ ಎಂಎನ್ 1.ಜೆಪಿಜಿ