ನನಗೆ ಒಳ್ಳೆಯದಾಗುವ ವಿಶ್ವಾಸ ಇದೆ : ಬಿವೈವಿ

KannadaprabhaNewsNetwork | Updated : Jun 27 2025, 10:53 AM IST

ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಸಂಘಟನಾ ಕೆಲಸ ಮಾಡಿದ್ದೇನೆ. ಹೀಗಾಗಿ, ನನಗೆ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

 ಬೆಂಗಳೂರು :  ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಸಂಘಟನಾ ಕೆಲಸ ಮಾಡಿದ್ದೇನೆ. ಹೀಗಾಗಿ, ನನಗೆ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ತಿಳಿಸಿದರು.

ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ, ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ನನಗೂ ಒಳ್ಳೆಯದಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ನಸು ನಗುತ್ತಲೇ ಉತ್ತರಿಸಿದರು.

ರಾಜ್ಯದ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಗೊಂದಲವಿದೆ ಎಂಬ ಹೇಳಿಕೆಗಳಲ್ಲಿ ಸತ್ಯಾಂಶವಿಲ್ಲ. ಈಗ ದೇಶದ 14 ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿದಿದೆ. ಈ ವಿಚಾರದಲ್ಲಿ ಘೋಷಣೆಯೂ ಆಗಿದೆ. ಸದ್ಯವೇ, ಅತಿ ಶೀಘ್ರದಲ್ಲೇ ಇನ್ನು ಆರೇಳು ರಾಜ್ಯಗಳ ಅಧ್ಯಕ್ಷರ ಘೋಷಣೆ ಆಗಲಿದೆ ಎಂಬ ಮಾಹಿತಿಯಿದೆ. ಅದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ ಆಗಲಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ವೈಯಕ್ತಿಕ ಕಾರಣಕ್ಕಾಗಿ ದೆಹಲಿಗೆ ಹೋಗಿದ್ದೆ. ಅದನ್ನು ಮುಗಿಸಿಕೊಂಡು ಬಂದಿದ್ದೇನೆ. ಪಕ್ಷದ ಕೆಲವು ಹಿರಿಯ ನಾಯಕರೂ ದೆಹಲಿಗೆ ಹೋಗಿದ್ದಾರೆ. ಕೆಲವರು ಇನ್ನೂ ವಾಪಸ್ ಬರುವುದು ಬಾಕಿ ಇದೆ ಎಂದರು. ಬಹಳ ಬೆಳವಣಿಗೆ ಆಗುತ್ತಿದೆ ಎಂಬುದು ಕಲ್ಪನೆಗಳು ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರ ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಪ್ರತಿಪಕ್ಷದ ನಾಯಕರು ದೆಹಲಿಗೆ ಹೋಗಬಾರದು; ನಮ್ಮ ಮುಖಂಡರನ್ನು ಭೇಟಿ ಮಾಡಬಾರದು ಎಂದರೆ ಹೇಗೆ? ಅಶೋಕ್ ಅವರು ಪ್ರತಿಪಕ್ಷದ ನಾಯಕರಾಗಿ ಬಹಳ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದರ ಬಗ್ಗೆ ಶಾಸಕರಿಗೂ ತೃಪ್ತಿ ಇದೆ ಎಂದರು.

ಬಿಜೆಪಿಯಲ್ಲಿ ಬೂದಿ ಮುಚ್ಚಿದಕೆಂಡದ ಸ್ಥಿತಿ ಇಲ್ಲ: ಬಿವೈವಿ- ಡೀವಿ ಹೇಳಿಕೆಗೆ ವಿಜಯೇಂದ್ರ ಸ್ಪಷ್ಟನೆಕನ್ನಡಪ್ರಭ ವಾರ್ತೆ ಬೆಂಗಳೂರುಬಿಜೆಪಿ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ ಎಂಬ ಮಾಜಿ ಮುಖ್ಯಮಂತ್ರಿ ಸದಾನಂದಗೌಡರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದಾನಂದಗೌಡರು ಹಿರಿಯ ನಾಯಕರು. ಅವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಸಣ್ಣಪುಟ್ಟ ಅಭಿಪ್ರಾಯ ವ್ಯತ್ಯಾಸ ಇರುವುದು ಸಹಜ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಹಿಂದೆ ಅಸಮಾಧಾನ ತೋಡಿಕೊಳ್ಳುತ್ತಿದ್ದವರು ಈಗ ಪಕ್ಷದಿಂದ ಹೊರಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರೂ ಹೊರಗಿದ್ದಾರೆ. ಇನ್ನೂ ಕೆಲವರು ತಮ್ಮ ಸಣ್ಣಪುಟ್ಟ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. 

ಮೊನ್ನೆ ನಾನು, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಇನ್ನೂ ಕೆಲ ಮುಖಂಡರು ಏನೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸಬೇಕೆಂದು ತೀರ್ಮಾನಿಸಿದ್ದೇವೆ. ಈಗಾಗಲೇ ಪ್ರಹ್ಲಾದ್ ಜೋಶಿ ಅವರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲ್ಲವೂ ಸರಿಯಾಗಲಿದೆ. ಆತಂಕಪಡುವ ಯಾವುದೇ ವಿಚಾರ ಇಲ್ಲ ಎಂದು ತಿಳಿಸಿದರು.

Read more Articles on