ಕೊಪ್ಪಳ: ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಹರಿಹಾಯ್ದಿರುವ ಸಚಿವ ಶಿವರಾಜ ತಂಗಡಗಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಯಪ್ಪಾ ಬೊಗಳೆ ದಾಸ, ''ನಿನಗೆ ತಾಕತ್ತು ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾ. ನೀನು ರಾಜೀನಾಮೆ ಕೊಟ್ಟ 24 ಗಂಟೆಯಲ್ಲಿ ನಾನೂ ರಾಜೀನಾಮೆ ಕೊಡುತ್ತೇನೆ. ಗಂಗಾವತಿಯಲ್ಲಿ ನನ್ನ ವಿರುದ್ಧ ಉಪ ಚುನಾವಣೆ ಎದುರಿಸಿ ನಿನ್ನ ಬಲಾಬಲ ತೋರಿಸು. ಪ್ರಚಾರ ಶೋಕಿಗೆ ವ್ಯರ್ಥ ಪ್ರಲಾಪ ಮಾಡಬೇಡ ಎಂದಿದ್ದಾರೆ.
ನಿನಗೆ ನೇರ ಸವಾಲು ಹಾಕಿ ಪಂಥಾಹ್ವಾನ ನೀಡುತ್ತಿದ್ದೇನೆ. ನೀನು ''ಯಸ್'' ಎಂದರೆ ನಾಳೆಯೇ ರಾಜೀನಾಮೆ ನೀಡುತ್ತೇನೆ. ಜನಾದೇಶ ಲೂಟಿಕೋರನಿಗೋ? ಜನ ಸೇವಕನಿಗೋ? ನೋಡೇ ಬಿಡೋಣ. ಗಣಿ ಲೂಟಿಕೋರ ನೀನು, ಗಂಗಾವತಿಯಲ್ಲಿ ಗೆದ್ದರೆ ಮತದಾರರಿಗೆ ಡಬಲ್ ಬೆಡ್ ರೂಮ್ ಮನೆ ನೀಡ್ತೀನಿ. ಕ್ರಿಕೆಟ್ ಸ್ಟೇಡಿಯಂ ಮಾಡ್ತೀನಿ ಅಂದಿದ್ದೆ ಈಡೇರಿಸಿದ್ದೀಯಾ? ಸುಳ್ಳು ಹೇಳಿಕೊಂಡು ಜೀವನ ಮಾಡೋ ನಿನಗೆ ಇಷ್ಟಿರುವಾಗ ಸ್ವಾಭಿಮಾನದಿಂದ ಬೆಳೆದವನು ನನಗೆ ಎಷ್ಟಿರಬೇಡ? ತಮ್ಮುಡು- ತಮ್ಮುಡು ಎಂದು ಗೊಗರೆದು, ಗೆಲುವಿನ ಸಂಭ್ರಮದಲ್ಲಿದ್ದ ನನ್ನನ್ನು ಕಾಲಿಗೆ ಚಪ್ಪಲಿ ಹಾಕಲೂ ಬಿಡದೇ ನಿಮ್ಮವರು ನನ್ನನ್ನು ಕರೆದುಕೊಂಡು ಬಂದರು.ನನ್ನ ಬೆಂಬಲ ತೋರಿಸಿ ನೀವು ಅಣ್ಣ ತಮ್ಮ ಇಬ್ಬರೂ ಮಂತ್ರಿ ಆಗುದ್ದೀರಿ. ನಿನಗೆ ತಾಕತ್ತಿದ್ದರೆ ಕಳೆದ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ನನಗೆ ಎಷ್ಟು ಕರೆ ಮಾಡಿದ್ದೀಯ? ಯಾರಿಗೆ ವೋಟ್ ಹಾಕಿದ್ಯಾ? ಕಾಲ್ ಲಿಸ್ಟ್ ತೆಗೆದು ಬಹಿರಂಗ ಪಡಿಸು. ನಿನ್ನ ಯೋಗ್ಯತೆ, ಪಕ್ಷವಿರೋಧಿ ಬೂಟಾಟಿಕೆ ರಾಜ್ಯದ ಜನತೆಗೆ ಹಾಗೂ ನಿನ್ನ ಬಿಜೆಪಿ ಪಕ್ಷದವರಿಗೆ ತಿಳಿಯಲಿ ಎಂದು ಸವಾಲು ಹಾಕಿದ್ದಾರೆ.
ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಗಂಗಾವತಿಯಲ್ಲಿಯೇ ನಿಂತು ತಾವು ಗೆಲ್ಲುವುದಾಗಿ ಹೇಳಿದ ರೆಡ್ಡಿ, ತಂಗಡಗಿ ಮತ್ತು ನಾಗೇಂದ್ರ ರಾಜೀನಾಮೆ ನೀಡಲಿ. ಚುನಾವಣೆಗೆ ಬನ್ನಿ, ಯಾರು ಗೆಲ್ಲುತ್ತಾರೆ ಎಂಬುದು ನೋಡೋಣ. ತಾವು ಚುನಾವಣೆಗೆ ಸಿದ್ಧವಾಗಿದ್ದು, ತಂಗಡಗಿ ಅವರ ಠೇವಣಿ ಕಳೆದುಕೊಳ್ಳಲಿದೆ ಎಂದು ಸವಾಲು ಹಾಕಿದರು.