ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಹೆರಗನಹಳ್ಳಿಯಲ್ಲಿ ನಿರ್ಮಿಸಿರುವ ಕಲ್ಯಾಣಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವರು ಐದು ವರ್ಷ ಕಾಲ ಯಾವುದೇ ಅಭಿವೃದ್ಧಿ ಕೆಲಸ ಮಾಡದಿದ್ದರೂ ಜನ ಕೇಳುವುದಿಲ್ಲ. ನಾನು ಗೆದ್ದಾಗ ಮಾತ್ರ ಅಭಿವೃದ್ಧಿ ಕೆಲಸ ಮಾಡಿ ಎಂದು ಒತ್ತಡ ಹೇರುತ್ತೀರಿ. ಕ್ಷೇತ್ರದ ಜನರು ಚುನಾವಣೆಯಲ್ಲಿ ಎರಡು ಬಾರಿ ನನ್ನನ್ನು ಸೋಲಿಸದಿದ್ದರೆ ತಾಲೂಕು ಇನ್ನೂ ನಾಲ್ಕುಪಟ್ಟು ಅಭಿವೃದ್ಧಿಯಾಗುತ್ತಿತ್ತು ಎಂದರು.
ಗ್ರಾಮದ ಡಾ.ಎಚ್.ಎಲ್.ನಾಗೇಗೌಡರು ಮತ್ತು ಮಾಜಿ ಸಚಿವ ಎಚ್.ಟಿ.ಕೃಷ್ಣಪ್ಪ ಅವರು ಸಾಹಿತ್ಯ ಹಾಗೂ ರಾಜಕೀಯ ಕ್ಷೇತ್ರಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿ ಗೌರವ ಕಾಪಾಡಿಕೊಂಡಿದ್ದಾರೆ. ಅವಕಾಶವಿದ್ದಾಗ ಶಾಶ್ವತವಾಗಿ ಉಳಿಯುವಂತಹ ಅಭಿವೃದ್ಧಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ ನಾನೂ ಕೂಡ ಜನರ ನಿರೀಕ್ಷೆಗೂ ಮೀರಿ ಹಗಲಿರುಳು ಶ್ರಮಿಸುತ್ತಿದ್ದೇನೆ. ಜನರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು.ಈ ಹಿಂದೆ ಹೆರಗನಹಳ್ಳಿ ಸಮೀಪವಿರುವ ಎನ್ಬಿಸಿ ಕಾಲುವೆಯ ಎಡಭಾಗದ ಅಚ್ಚುಕಟ್ಟಿಗೆ ಮಾತ್ರ ಹೇಮಾವತಿ ನೀರು ಹರಿಸಲು ಕಾನೂನಿನಲ್ಲಿ ಅವಕಾಶವಿತ್ತು. ಈ ಹಿಂದೆ ನಾನು ಸಚಿವನಾಗಿದ್ದ ಅವಧಿಯಲ್ಲಿ ಬಲಭಾಗದ ಅಚ್ಚುಕಟ್ಟಿಗೂ ಅವಕಾಶ ಕಲ್ಪಿಸುವ ಸಲುವಾಗಿ ವಿಶೇಷ ಮಂಜೂರಾತಿ ಕೊಡಿಸಲಾಯಿತು. ನಂತರ ಈ ಭಾಗದ ಕೆರೆಗಳಿಗೂ ನೀರು ತುಂಬಿಸಲು 990 ಲಕ್ಷ ರು. ವೆಚ್ಚದ ಯೋಜನೆಯನ್ನು ಕೈಗೆತ್ತಿಕೊಂಡು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇದರಿಂದಾಗಿ ಹೆರಗನಹಳ್ಳಿ ಸೇರಿದಂತೆ ಈಭಾಗದ ಬಹುತೇಕ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಲಿದೆ ಎಂದರು.
ತಾಲೂಕಿನ ಜನರು ಬರಗಾಲದ ನಡುವೆ ಜೀವನ ನಡೆಸಿದರೂ ಕೂಡ ಅತ್ಯಂತ ಸೌಮ್ಯಸ್ವಭಾವದವರು, ಬುದ್ಧವಂತರು ಎನ್ನುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಯಾವ ಕಾರಣಕ್ಕೆ ಬದಲಾವಣೆಯಾಗಿದ್ದಾರೆಂಬುದು ನನಗೆ ಗೊತ್ತಿಲ್ಲ. ಇನ್ನು ಮುಂದಾದರೂ ಪಕ್ಷ, ರಾಷ್ಟ್ರ ರಾಜಕಾರಣ ಹಾಗೂ ತಾಲೂಕಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರಾಮಾಣಿಕವಾಗಿ ಜನಪರ ಕೆಲಸ ಮಾಡುವವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.