ಕನ್ನಡಪ್ರಭ ವಾರ್ತೆ ಹಾಸನ
ಒಬ್ಬ ಶಾಸಕನೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು, ಯಾವ ರೀತಿಯ ಗೌರವ ನೀಡಬೇಕು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ತಾವು ಹಲವು ಜಿಲ್ಲಾಧಿಕಾರಿಗಳೊಂದಿಗೆ ಕೆಲಸ ಮಾಡಿರುವುದನ್ನು ಉಲ್ಲೇಖಿಸಿದ ಅವರು, ಹಿಂದೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದ ರೋಹಿಣಿ ಸಿಂಧೂರಿ, ಅರ್ಚನಾ, ನವೀನ್ ರಾಜ್ ಸಿಂಗ್ ಸೇರಿದಂತೆ ಅನೇಕ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಿದ್ದೇನೆ. ಆದರೆ ಪ್ರಸ್ತುತ ಜಿಲ್ಲಾಧಿಕಾರಿಯೊಂದಿಗೆ ಮಾತ್ರ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ನಾನು ಜಿಲ್ಲಾಧಿಕಾರಿಯ ಬಳಿ ನನ್ನ ಹೊಲ, ಮನೆ ಅಥವಾ ಲೇಔಟ್ಗೆ ಸಂಬಂಧಿಸಿದ ಯಾವುದೇ ಕೆಲಸಕ್ಕಾಗಿ ಹೋಗಿಲ್ಲ. ಯಾವುದೇ ಮದ್ಯದಂಗಡಿ ಅಥವಾ ವೈಯಕ್ತಿಕ ವ್ಯವಹಾರಕ್ಕಾಗಿ ಒತ್ತಡ ಹಾಕಿಲ್ಲ. ಮೊದಲು ಬಡವರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.ಸ್ಪೀಕರ್, ಮುಖ್ಯ ಕಾರ್ಯದರ್ಶಿಗೆ ದೂರು ಜಿಲ್ಲಾಧಿಕಾರಿ ಬಡವರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ ರೇವಣ್ಣ, ಹಳ್ಳಿಗಳಿಗೆ ತೆರಳಿ ಜನರ ನೋವು ಆಲಿಸಬೇಕು ಎಂದರು. ಕೆರೆಕಟ್ಟೆ ಒತ್ತುವರಿ, ಅರಣ್ಯ ಒತ್ತುವರಿ ತೆರವು, ಸರ್ಕಾರಿ ಜಮೀನು ಸಂರಕ್ಷಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಜಿಲ್ಲಾಡಳಿತದ ಪ್ರಗತಿಯ ಬಗ್ಗೆ ಪ್ರಶ್ನೆ ಎತ್ತಿದರು. ಜಿಲ್ಲಾಧಿಕಾರಿ ಕಾರ್ಯವೈಖರಿಯಿಂದ ಹಲವರು ಸಿಬ್ಬಂದಿ ವರ್ಗಾವಣೆ ಪಡೆದು ಹೋಗಿದ್ದಾರೆ ಎಂದು ಆರೋಪಿಸಿದ ಅವರು, ಅಧಿಕಾರಿಗಳು ಹಾಗೂ ಮಹಿಳಾ ಸಿಬ್ಬಂದಿಯೊಂದಿಗೂ ಏಕವಚನದಲ್ಲಿ ಮಾತನಾಡಲಾಗುತ್ತಿದೆ ಎಂದು ದೂರಿದರು. ಜನಪ್ರತಿನಿಧಿಗಳನ್ನು ಅಧಿಕಾರಿಗಳು ಹೀಯಾಳಿಸುತ್ತಿರುವ ಕುರಿತು ವಿಧಾನಸಭಾಧ್ಯಕ್ಷರು ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿಯ ಗಮನಕ್ಕೆ ತರಲಾಗುವುದು ಎಂದು ರೇವಣ್ಣ ಎಚ್ಚರಿಸಿದರು. ಒಬ್ಬ ಶಾಸಕರ ವಿರುದ್ಧ ಜಿಲ್ಲಾಧಿಕಾರಿ ಯಾವ ಆಧಾರದ ಮೇಲೆ ಆರೋಪ ಮಾಡುತ್ತಾರೆ ಎಂಬ ಪ್ರಶ್ನೆ ಎತ್ತಿದ ಅವರು, ಜನಪ್ರತಿನಿಧಿಗಳ ಬಗ್ಗೆ ಮಾತನಾಡುವಾಗ ಅಧಿಕಾರಿಗಳು ಮಿತಿಯನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲಾತಿ ನಿಗದಿ ವಿಚಾರದಲ್ಲೂ ಜಿಲ್ಲಾಧಿಕಾರಿಯ ವಿರುದ್ಧ ಪ್ರಶ್ನೆ ಎತ್ತಿದ ರೇವಣ್ಣ, ಲೋಕಸಭಾ ಸದಸ್ಯರು ಹೇಳಿದಂತೆ ಮೀಸಲಾತಿ ಪಟ್ಟಿ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದರು. ಈ ವಿಚಾರವನ್ನು ತಹಸೀಲ್ದಾರ್ ಅವರೇ ತನಗೆ ತಿಳಿಸಿದ್ದಾರೆ ಎಂದು ಹೇಳಿದರು.
====ಬಾಕ್ಸ್: ಐಐಟಿ ಸೇರಿದಂತೆ ನಾಲ್ಕು ಯೋಜನೆಗಳಿಗೆ ಆದ್ಯತೆ:ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ನಾಲ್ಕು ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಶಿವಲಿಂಗೇಗೌಡ ತಿಳಿಸಿದರು. ಐಐಟಿ ಸ್ಥಾಪನೆಗೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದರೂ ಯೋಜನೆಗೆ ಇನ್ನೂ ಮಂಜೂರಾತಿ ದೊರೆತಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ನೂತನ ಜಿಲ್ಲಾಧಿಕಾರಿ ಕಚೇರಿ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಅಗತ್ಯ ಅನುದಾನ ಬಿಡುಗಡೆಯಾಗಿಲ್ಲ. ಈ ಯೋಜನೆಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದರು.