ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ-ಸಚಿವ ಎಚ್‌.ಕೆ. ಪಾಟೀಲ

KannadaprabhaNewsNetwork |  
Published : Jun 25, 2025, 01:17 AM IST
ಸಭೆಯನ್ನು ಉದ್ದೇಶಿಸಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು.

ಗದಗ: ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನನೆಗುದಿಗೆ ಬಿದ್ದಿರುವ ಅಪೂರ್ಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

"ಯೋಜನೆಗಳು ನನೆಗುದಿಗೆ " ಶೀರ್ಷಿಕೆಯಡಿ ಪ್ರಕಟವಾದ ಕನ್ನಡಪ್ರಭದ ಸರಣಿ ವರದಿಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವುಗಳನ್ನು ಪ್ರಸ್ತಾಪಿಸಿ, ನನೆಗುದಿಗೆ ಬಿದ್ದ ಯೋಜನೆಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಂದಿರಾ ಕ್ಯಾಂಟೀನ್:

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಸೌಲಭ್ಯ ಬಡಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಇಲಾಖೆಯ ಅಧಿಕಾರಿಗಳದ್ದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪಂ. ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದ ಆವರಣದಲ್ಲಿ ಆ. 15ರಂದು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕು ಎಂದು ನಿರ್ದೇಶನ ನೀಡಿದರು.

ಗಂಗಿಮಡಿಯಲ್ಲಿ ಬಡವರಿಗಾಗಿ ಜಿ+ ಮಾದರಿಯಲ್ಲಿನ 3630 ಮನೆಗಳ ಸಮುಚ್ಛಯ ನಿರ್ಮಾಣ ಕಾಮಗಾರಿ ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಇರುವ ತಾಂತ್ರಿಕ ತೊಂದರೆ ಪರಿಹಾರ ಕಂಡುಕೊಳ್ಳಿ. ಸರ್ಕಾರದ ಹಂತದಲ್ಲಿ ದೊರೆಯಬೇಕಾದ ಅನುಮೋದನೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಒಟ್ಟಾರೆ ಬಡವರಿಗಾಗಿ ನಿರ್ಮಿಸುತ್ತಿರುವ ವಸತಿ ಸಮುಚ್ಛಯ ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸುವಂತೆ ತಿಳಿಸಿದರು.

ಹಲವು ವರ್ಷದಿಂದ ತಾ.ಪಂ. ಕಚೇರಿಯ ನೂತನ ಕಟ್ಟಡದ ನಿರ್ಮಾಣ ಕಾರ್ಯ ನಿಧಾನಗತಿಯಲ್ಲಿ ಸಾಗಿದೆ. ಪರಿಷ್ಕೃತ ಅಂದಾಜು ವೆಚ್ಚದ ಪ್ರಸ್ತಾವನೆ ಸಲ್ಲಿಸಿ ಸುಮ್ಮನೆ ಕೂಡದೇ ನಿರಂತರ ಸಂಪರ್ಕದಲ್ಲಿದ್ದು ಕಾಮಗಾರಿ ಪೂರ್ಣಗೊಳಿಸುವಂತೆ ತಾ.ಪಂ. ಇಒ ಮಲ್ಲಯ್ಯ ಅವರಿಗೆ ಸೂಚಿಸಿದರು.

ಕೆರೆ ನಿರ್ಮಾಣ ಶೀಘ್ರ: ಬೇಸಿಗೆಯಲ್ಲಿ ಅವಳಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಪಾಪನಾಶಿ ಹತ್ತಿರ ನಿರ್ಮಿಸಲು ಉದ್ದೇಶಿಸಿರುವ ಕೆರೆ ಹಲವು ವರ್ಷಗಳೇ ಗತಿಸಿದರೂ ಕಾಮಗಾರಿ ಪ್ರಗತಿ ಸಾಧಿಸದ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸುತ್ತಾ, ಇರುವ ತಾಂತ್ರಿಕ ಹಾಗೂ ಆರ್ಥಿಕ ತೊಂದರೆಗಳ ಪರಿಹಾರಕ್ಕೆ ಶೀಘ್ರವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಲಿಂ. ಪಂಡಿತ ಪುಟ್ಟರಾಜ ಗವಾಯಿಗಳವರ ಸ್ಮಾರಕ ಭವನದ ಎಲ್ಲ ಹಂತದ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇದಕ್ಕೆ ಅಗತ್ಯವಿರುವ ಪರಿಷ್ಕೃತ ಅಂದಾಜು ಪಟ್ಟಿಯನ್ನು ಇಂದೇ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಲೋಕೋಪಯೋಗಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.

ಸ್ಥಳೀಯ ಸಂಸ್ಥೆಗಳ ಕಾಯಂ ಪೌರಕಾರ್ಮಿಕರ ಸಂಖ್ಯೆ ಮತ್ತು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ವಿವರಗಳನ್ನು ಸಲ್ಲಿಸಬೇಕು. ಜೊತೆಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬೇಕೆಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಗದಗ -ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಡಿಸಿ ಸಿ.ಎನ್.ಶ್ರೀಧರ್, ಜಿ ಪಂ ಸಿಇಓ ಭರತ್ ಎಸ್, ಎಡಿಸಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಲೋಕೋಪಯೋಗಿ ಇಲಾಖೆ ರಮೇಶ ಪಾಟೀಲ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ