ರಾಮನಗರ: ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆ ಇಟ್ಟವನಲ್ಲ. ನೀತಿ ಮೇಲೆ ನಂಬಿಕೆ ಇಟ್ಟಿರುವವನು. ಬಡವರ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ ಎಂದರು.
100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ :ರಾಮನಗರ ಕ್ಷೇತ್ರದ ಬಡ ಜನರಿಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. ಬಗರ್ ಹುಕುಂ ಸೇರಿದಂತೆ, ಭೂ ಸುಧಾರಣಾ ಕಾಯ್ದೆಯಡಿ ಮಂಜೂರಾತಿಗೆ ಬಾಕಿ ಇರುವ ಭೂಮಿಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ರಾಮನಗರದಲ್ಲಿ ಶಾಸಕರಾಗಿದ್ದ ಸಿ.ಎಂ. ಲಿಂಗಪ್ಪ ಅವರು ನೂರಾರು ಜನರಿಗೆ ಭೂಮಿ ಹಂಚಿಕೆ ಮಾಡಿದರು. ಆನಂತರ ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು, ಬಡವರಿಗೆ ನಿವೇಶನ ಹಂಚಲು ಆಗಲಿಲ್ಲ. ಹೀಗಿದ್ದ ಮೇಲೆ ರಾಜಕಾರಣ ಏಕೆ ಮಾಡಬೇಕು? ರಾಜಕೀಯ ಮಾಡುವ ಅವಕಾಶವನ್ನೇ ಜನತಾದಳದವರು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.
ಮಾಜಿ ಸಚಿವ ಅಶ್ವತ್ಥ ನಾರಾಯಣ ಅವರು ಜಿಲ್ಲೆಗೆ ಬಂದಿದ್ದರು. ವೀರಾಧಿವೀರ ಗಂಡು. ಯಾರಾದರೂ ಗಂಡಸರು ಇದ್ದೀರಾ? ಎಂದು ಪ್ರಶ್ನಿಸಿದ್ದರು. ಅವರಿಗೂ ಸಹ ಒಂದೇ ಒಂದು ನಿವೇಶನ ಹಂಚಲು ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಒಬ್ಬರಿಗೂ ಸಹಾಯ ಮಾಡಲು ಆಗಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.
ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ: ಡಿಕೆಶಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಬೇರೆ ಪಕ್ಷದವರು ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ. ಜಾತಿಗಳ ಪಟ್ಟಿಯಲ್ಲಿ ಅಕ್ಷರಗಳ ಆಧಾರದ ಮೇಲೆ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ, ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ ಎಂದರು.
ಕೋಟ್..............
ಈ ದೇಶದ ಬಡವರು, ಹಿಂದುಳಿದ ವರ್ಗದವರ ಪರವಾಗಿ ಕೆಲಸ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಓಬಿಸಿಗಳ ಏಳಿಗೆಗಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ನಿಮ್ಮ ಜಾತಿಯನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಬರೆಸಬೇಕು. ನೀವು ಸರಿಯಾಗಿ ನಿಮ್ಮ ಜಾತಿ ನಮೂದಿಸದಿದ್ದರೆ ಇಡೀ ಸಮಾಜಕ್ಕೆ ಅನ್ಯಾಯ ಎಸಗಿದಂತೆ, ಆತ್ಮಸಾಕ್ಷಿಗೆ ಮೋಸ ಮಾಡಿದಂತಾಗುತ್ತದೆ.
- ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಗಳು19ಕೆಆರ್ ಎಂಎನ್ 2.ಜೆಪಿ
ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಸಮಾರಂಭದಲ್ಲಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಪುಷ್ಪ ನಮನ ಸಲ್ಲಿಸಿದರು.