ಮರಿಯಮ್ಮನಹಳ್ಳಿ: ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಪ್ರೀತಿ, ವಿಶ್ವಾಸದಿಂದ ನಮ್ಮನ್ನು ಗೆಲ್ಲಿಸಿದ್ದಾರೆ. ಮತದಾರರ ವಿಶ್ವಾಸಕ್ಕೆ ತಕ್ಕಂತೆ ನಾನು ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸ ಕೈಗೊಂಡಿರುವೆ. ಪ್ರತಿಯೊಂದು ಗ್ರಾಮದಲ್ಲಿಯೂ ಮೂಲಭೂತ ಸೌಲಭ್ಯ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಶಾಸಕ ಕೆ. ನೇಮಿರಾಜ ನಾಯ್ಕ ಹೇಳಿದರು.
ಹಗರಿಬೊಮ್ಮನಹಳ್ಳಿ ಕ್ಷೇತ್ರದ ಎಲ್ಲ ಹಳ್ಳಿಗಳಲ್ಲಿಯೂ ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರಿನ ಯೋಜನೆ, ಸಮುದಾಯ ಭವನ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಿದರೆ ರೈತರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಸಹಾಯವಾಗಲಿದೆ. ಆದರಿಂದ ಕ್ಷೇತ್ರದ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ತರಲು ಪ್ರಯತ್ನಿಸುತ್ತಿರುವೆ. ಆದರೆ ಈ ಸರ್ಕಾರದಲ್ಲಿ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಜಿ.ನಾಗಲಾಪುರದ ಶ್ರೀಗುರು ಒಪ್ಪತ್ತೇಶ್ವರಮಠದ ನಿರಂಜನಪ್ರಭು ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.ಡಣಾಯಕನಕೆರೆ ಗ್ರಾಪಂ ಪಿಡಿಓ ಜಿಲಾನ್ ಸಾಹೇಬ್ ಸೇರಿದಂತೆ ಗ್ರಾಮದ ಮುಖಂಡರು, ವಿವಿಧ ಗ್ರಾಮಗಳ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.