ಜಿಲ್ಲೆಯಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳ ಕಡೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಆರು ತಾಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಣೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಆಯಾ ಕ್ಷೇತ್ರ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಎಲ್ಲೆಲ್ಲಿ ನೀರಿನ ಮೂಲಗಳಿವೆ, ಪೈಪ್ಲೈನ್ ವಿಸ್ತರಣೆ, ಬೋರ್ವೆಲ್ ದುರಸ್ತಿ, ಟ್ಯಾಂಕರ್ ಮೂಲಕ ನೀರು ಪೂರೈಕೆ ಸೇರಿದಂತೆ ಕೂಲಕಂಕಷವಾಗಿ ಚರ್ಚಿಸಬೇಕು. ನೀರಿನ ಸಮಸ್ಯೆಯಾಗದಂತೆ ಖಾಸಗಿ ಬೋರ್ವೆಲ್ಗಳನ್ನು ಗುರುತಿಸಿಟ್ಟುಕೊಂಡಿರಬೇಕು. ಮಾಲೀಕರ ಮನವೊಲಿಸಿ ಬಾಡಿಗೆ ನಿಗದಿಪಡಿಸಬೇಕು. ಅಂತಹ ಕೊಳವೆ ಬಾವಿಗಳಿಗೆ ಅಗತ್ಯವಿದ್ದರೆ ಪೈಪ್ಲೈನ್ ಮಾಡಿಕೊಳ್ಳಬಹುದು. ಒಂದು ವೇಳೆ ನೀರು ಲಭ್ಯವಾಗದೇ ಇರುವ ಪಕ್ಷದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಕೊನೆ ಆದ್ಯತೆಯಾಗಬೇಕು ಎಂದು ಹೇಳಿದರು.
ಚಳ್ಳಕೆರೆ ತಾಪಂ ಇಒ ಮಾತನಾಡಿ, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಅಲ್ಪಮಟ್ಟಿಗೆ ಕುಸಿದಿದೆ. ಈಗಾಗಲೆ 53 ಹಳ್ಳಿಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳು ಎಂದು ಗುರುತಿಸಲಾಗಿದೆ. 18 ಹಳ್ಳಿಗಳಿಗೆ ಖಾಸಗಿ ಬೋರ್ವೆಲ್ ಗಳನ್ನು ಗುರುತಿಸಲಾಗಿದೆ. ಇದರಲ್ಲಿಯೂ ನೀರು ಕಡಿಮೆಯಾಗುವ ಸಂಭವ ಇದೆ. ಇನ್ನೂ 14 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡುವ ಪರಿಸ್ಥಿತಿ ಬರಬಹುದು ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಪರಿಸ್ಥಿತಿ ಗಂಭೀರವಾದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ. ಒಟ್ಟಾರೆಯಾಗಿ ಕುಡಿಯುವ ನೀರು ಪೂರೈಕೆ ಮಾಡಲೇಬೇಕು. ಪ್ರತಿ ತಾಲೂಕಿಗೆ ತುರ್ತು ಕಾರ್ಯಗಳಿಗಾಗಿ 40 ಲಕ್ಷ ರು. ಅನುದಾನ ಒದಗಿಸಲಾಗಿದೆ ಎಂದರು. ಅಲ್ಲದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ತುರ್ತಾಗಿ ಅಗತ್ಯವಿರುವೆಡೆ ತಹಸಿಲ್ದಾರರ ಸೂಚನೆ ಮೇರೆಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವವರಿಗೆ ಟೆಂಡರ್ನಲ್ಲಿ ಅಂತಿಮವಾಗಿ ನಿಗದಿಯಾಗುವ ದರಕ್ಕೆ ಅನುಗುಣವಾಗಿ ಮೊತ್ತ ಪಾವತಿಸಲಾಗುವುದು ಎಂದರು.
ಮುಂಬರುವ ತಿಂಗಳುಗಳಲ್ಲಿ ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಚಳ್ಳಕೆರೆ ತಾಲೂಕಿನಲ್ಲಿ 53, ಚಿತ್ರದುರ್ಗ-44, ಹಿರಿಯೂರು-57, ಹೊಳಲ್ಕೆರೆ-53, ಹೊಸದುರ್ಗ-36 ಹಾಗೂ ಮೊಳಕಾಲ್ಮುರು ತಾಲೂಕಿನಲ್ಲಿ 67 ಸಮಸ್ಯಾತ್ಮಕ ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವವಿದೆ. ಈ ಸಂಖ್ಯೆಯು ದಿನದಿಂದ ದಿನಕ್ಕೆ ಬದಲಾಗುವ ಸಾಧ್ಯತೆಗಳಿವೆ. ಹಾಗಾಗಿ ಚಳ್ಳಕೆರೆ ತಾಲೂಕಿನಲ್ಲಿ 24, ಚಿತ್ರದುರ್ಗ-1, ಹಿರಿಯೂರು-54, ಹೊಳಲ್ಕೆರೆ-13 ಹಾಗೂ ಮೊಳಕಾಲ್ಮುರು ತಾಲೂಕಿನಲ್ಲಿ 78 ಸೇರಿದಂತೆ ಒಟ್ಟು 170 ಬೋರ್ ವೆಲ್ ಳನ್ನು ಗುರುತಿಸಲಾಗಿದೆ. ಪೈಪ್ಲೈನ್ ಮತ್ತಿತರ ತುರ್ತು ಕಾರ್ಯಗಳಿಗಾಗಿ ಪ್ರತಿ ತಾಲೂಕಿಗೆ ತಲಾ 25 ಲಕ್ಷ ರು. ಅನುದಾನ ಒದಗಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಹೇಳಿದರು.
------------