ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ವೃದ್ಧಾಶ್ರಮದ ಅಗತ್ಯ ಇರಲ್ಲ

KannadaprabhaNewsNetwork |  
Published : Oct 02, 2024, 01:15 AM IST
1ಎಚ್‌ಪಿಟಿ3- ಹೊಸಪೇಟೆಯಲ್ಲಿ ಮಂಗಳವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ನಾಗರಿಕರೊಂದಿಗೆ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್ ಅವರು ಚಾಲನೆ ನೀಡಿದರು. | Kannada Prabha

ಸಾರಾಂಶ

ಹಿರಿಯರು ತಮ್ಮದೇ ಆದ ರೀತಿಯಲ್ಲಿ ಸಾಧನೆ ಮಾಡಿರುತ್ತಾರೆ.

ಹೊಸಪೇಟೆ: ತಂದೆ, ತಾಯಿ, ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ಅವರು ತಂದೆ, ತಾಯಿಯನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ. ಆಗ ಯಾವುದೇ ವೃದ್ಧಾಶ್ರಮದ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಶೇಷಚೇತನರಿಗೆ ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಚರ್ಚ್ ಭವನದಲ್ಲಿ ಮಂಗಳವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಹಿರಿಯರಿಗೆ ಮನೆಗಳಲ್ಲಿ ಅಗೌರವ ತೋರುವುದು ಕಂಡುಬರುತ್ತಿದೆ. ಹಿರಿಯರು ತಮ್ಮದೇ ಆದ ರೀತಿಯಲ್ಲಿ ಸಾಧನೆ ಮಾಡಿರುತ್ತಾರೆ. ಅವರಿಗೆ ಗೌರವ ಸಲ್ಲಿಸಬೇಕು ಎನ್ನುವ ಸಂದೇಶ ರವಾನಿಸುವುದು, ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸಮಾಜದಲ್ಲಿ ಯಾವ ಕುಟುಂಬಗಳಲ್ಲಿ ಹಿರಿಯ ನಾಗರಿಕರಿಗೆ ಗೌರವ ನೀಡುವುದಿಲ್ಲಯೋ ಅಂತಹ ಕುಟುಂಬಗಳು ಸಂತೋಷ, ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದರು.

ಪೋಷಕರು ಮಕ್ಕಳಿಗಾಗಿ ಆಸ್ತಿ ಮಾಡುವುದನ್ನು ನಿಲ್ಲಿಸಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿದರೆ ಅವರು ಮುಂದೆ ಪೋಷಕರನ್ನು ಮಕ್ಕಳ ರೀತಿ ನೋಡಿಕೊಳ್ಳುತ್ತಾರೆ. ಹಿರಿಯ ನಾಗರಿಕರು ಜೀವನದಲ್ಲಿ ಎಲ್ಲವನ್ನು ತಿಳಿದ ಮುಗ್ಧರಂತೆ ಇರುತ್ತಾರೆ. ಅವರನ್ನು ಅಷ್ಟೇ ಮುಗ್ಧತೆಯಿಂದ ನೋಡಿಕೊಳ್ಳುವುದು ಮಕ್ಕಳ ಜವಾಬ್ದಾರಿ ಎಂದರು.

ವಿಜಯನಗರ ಜಿಲ್ಲೆಯ ರಂಗಭೂಮಿ, ಸಮಾಜಸೇವೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಗರಿಬೊಮ್ಮನಹಳ್ಳಿ ತಾಲೂಕಿನ ಕೆ.ಲಕ್ಷ್ಮೀಪತಿ, ಕೊಟ್ಟೂರು ತಾಲೂಕಿನ ಎಂ.ಶೇಖರಪ್ಪ, ಹೊಸಪೇಟೆ ತಾಲೂಕಿನ ಹನುಮಂತಪ್ಪ ನಾಯಕರ, ಹರಪನಹಳ್ಳಿ ತಾಲೂಕಿನ ಷಡಕ್ಷರಪ್ಪ, ಕೂಡ್ಲಿಗಿ ತಾಲೂಕಿನ ವೆಂಕಟೇಶ ಕೆ., ಹೂವಿಹಡಗಲಿ ತಾಲೂಕಿನ ಶಂಕ್ರಯ್ಯ ತೋಟದೇವರಮಠ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮಣ್ಣ ಇವರಿಗೆ ಸನ್ಮಾನಿಸಲಾಯಿತು.

ಇದೇ ವೇಳೆ ಈ ಹಿಂದೆ ಆಯೋಜಿಸಿದ್ದ, ಬಿರುಸಿನ ನಡಿಗೆ ಸ್ಪರ್ಧೆ, ಮ್ಯೂಸಿಕಲ್ ಚೇರ್ ಸ್ಪರ್ಧೆ, ಗಾಯನ ಸ್ಪರ್ಧೆ ಮತ್ತು ಏಕ ಪಾತ್ರಾಭಿನಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ ವಿತರಿಸಲಾಯಿತು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಎಸ್., ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸುದೀಪಕುಮಾರ ಉಂಕ್ರಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಅವಿನಾಶ ಲಿಂಗ ಎಸ್. ಗೋಟಖಿಂಡಿ, ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಯಲಿಗಾರ ಮತ್ತು ಬ್ರಹ್ಮಕುಮಾರಿ ಮಾನಸಾ ಸೇರಿದಂತೆ ಹಿರಿಯ ನಾಗರಿಕರು ಇದ್ದರು.

ಹೊಸಪೇಟೆಯಲ್ಲಿ ಮಂಗಳವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ನಾಗರಿಕರೊಂದಿಗೆ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ