ಜ.30 ರೊಳಗೆ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಾರ್ಯಾಲಯದ ಮುಂದೆ ಆಹೋರಾತ್ರಿ ಧರಣಿ ಪ್ರಾರಂಭಿಸಲಾಗುವುದು
ನರಗುಂದ: ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಮಾಡಿಕೊಂಡ ರೈತರಿಗೆ ಸರ್ಕಾರ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡದೇ ಅನ್ಯಾಯ ಮಾಡುತ್ತಿದ್ದು. ಹೀಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಮಾಡಲಾಗುವುದು ಎಂದು ರೈತ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ.ಜೋಗಣ್ಣವರ ಎಚ್ಚರಿಸಿದರು.
ಅವರು 3469 ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ಕೃಷಿ ಪ್ರಧಾನ ತಾಲೂಕಿನಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಗೋವಿನ ಜೋಳ, ಬಿ.ಟಿ.ಹತ್ತಿ, ಮೆಣಸಿನಕಾಯಿ, ಈರಳ್ಳಿ, ತೊಗರಿ, ಸೂಯಾಕಾಂತಿ ಸೇರಿದಂತೆ ಇತರ ಬೆಳೆ ಬಿತ್ತನೆ ಮಾಡಿ ಉತ್ತಮವಾಗಿ ಬೆಳೆದಿದ್ದರು. ಆದರೆ 2024ರ ಅಕ್ಟೋಬರ್ನಲ್ಲಿ ಕಟಾವಿಗೆ ಬಂದ ಸಂದರ್ಭದಲ್ಲಿ ಸುರಿದ ನಿರಂತರ ಮಳೆಗೆ ಜಮೀನಿನಲ್ಲಿ ಕೊಳೆತು ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿದರೂ ಸರ್ಕಾರ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡದೇ ಅನ್ಯಾಯ ಮಾಡಿದೆ. ಜ.30 ರೊಳಗೆ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಾರ್ಯಾಲಯದ ಮುಂದೆ ಆಹೋರಾತ್ರಿ ಧರಣಿ ಪ್ರಾರಂಭಿಸಲಾಗುವುದು ಎಂದರು. ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಸಿ.ಎಸ್. ಪಾಟೀಲ, ಹನಮಂತ ಸರನಾಯ್ಕರ, ಮಲ್ಲೇಶ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಶಂಕ್ರಪ್ಪ ಜಾಧವ, ಯಲ್ಲಪ್ಪ ಚಲವಣ್ಣವರ, ಅರ್ಜುನ ಮಾನೆ, ಸೋಮಲಿಂಗಪ್ಪ ಆಯಿಟ್ಟಿ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಸೇರಿದಂತೆ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.