ಶಿವಮೊಗ್ಗ: ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿಯೇ ಬಳಸಬೇಕಾದ ಅಗತ್ಯವಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಜಾತಿ ಆಧಾರಿತ ವ್ಯವಸ್ಥೆ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು ಎಂದರು.
ಭಾರತ ದೇಶಕ್ಕೆ ಭವ್ಯ ಇತಿಹಾಸವಿದೆ. ಪ್ರಜಾಪ್ರಭುತ್ವದ ಭದ್ರಬುನಾದಿಯ ಮೇಲೆ ದೇಶದ ಭವಿಷ್ಯ ನಿಂತಿದೆ. ಪ್ರಜಾಪ್ರಭುತ್ವವು ಎಲ್ಲಾ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಪುಷ್ಠೀಕರಿಸುತ್ತದೆ ಎಂಬ ನಂಬಿಕೆಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಮಹತ್ವ ಬಂದಿದೆ. ಈ ಸಂದರ್ಭದಲ್ಲಿ ನಮ್ಮನ್ನಾಳುವ ಸರ್ಕಾರಗಳ ಪಾತ್ರವನ್ನು ಎತ್ತಿ ತೋರಿಸಲು, ನ್ಯಾಯ, ಶಾಂತಿ, ಅಭಿವೃದ್ಧಿ ಮತ್ತು ಮಾನವ ಹಕ್ಕುಗಳನ್ನು ತಲುಪಿಸುವಲ್ಲಿ ಇರುವ ಸದವಕಾಶವಾಗಿರಲಿದೆ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ಹಕ್ಕುಗಳನ್ನು ಬಳಸಿಕೊಳ್ಳುವಂತೆಯೇ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಮರ್ಥ ಜನನಾಯಕನನ್ನು ಆಯ್ಕೆಗೊಳಿಸುವಲ್ಲಿ ಎಲ್ಲರೂ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತ ಚಲಾಯಿಸದವರಿಗೆ ಸರ್ಕಾರದ ಯಾವುದೇ ಸೌಲಭ್ಯವನ್ನು ನೀಡದಿರುವ ಕಾನೂನು ಜಾರಿಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ದೇಶದ ಬೆಳವಣಿಗೆಯನ್ನು ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿದೆ. ಇದುವೇ ಭಾರತದ ಸುವರ್ಣಕಾಲ. ವಿಶ್ವಗುರುವಾಗುವ ಪುಣ್ಯಕಾಲ ಎಂದವರು ಬಣ್ಣಿಸಿದರು.
ಇದೇ ವೇಳೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕುರಿತು ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ, ಚರ್ಚಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸೈಕಲ್ ರ್ಯಾಲಿಯಲ್ಲಿ ಭಾಗವಹಿಸಿದವರಿಗೆ ಅಭಿನಂದಿಸಲಾಯಿತು.