ಧಾರವಾಡ: ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡವನ್ನು ಜೀವಂತವಾಗಿಸುವ ಕಾರ್ಯವನ್ನು ಮಹಾರಾಷ್ಟ್ರ ಜತ್ತ ತಾಲೂಕಿನ ಸಂಖ ಗ್ರಾಮದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆರ್.ಕೆ. ಪಾಟೀಲ ಮಾಡಿದ್ದಾರೆ ಎಂದು ಅಥಣಿ ವಿಮೋಚನಾ ಸಂಸ್ಥೆಯ ಅಧ್ಯಕ್ಷರಾದ ಬಿ.ಎಲ್. ಪಾಟೀಲ ಹೇಳಿದರು.
ಸಂಘದ ಗೌರವ ಉಪಾಧ್ಯಕ್ಷ ಡಾ. ಅಜಿತಪ್ರಸಾದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ಅನುದಾನಿತ ಕನ್ನಡ ಮಾಧ್ಯಮ ಶಾಲೆ ನಡೆಸುವುದು ತುಂಬಾ ಕಷ್ಟ. ಖಾಲಿ ಹುದ್ದೆ ತುಂಬಲು ಸರ್ಕಾರದ ಅನುಮತಿ ಇಲ್ಲದ್ದರಿಂದ ಹೆಚ್ಚು ಆರ್ಥಿಕ ಹೊರೆ ಆಡಳಿತ ಮಂಡಳಿ ಹೊರಬೇಕಿದೆ. ಆರ್.ಕೆ. ಪಾಟೀಲ ಅವರು ಸಂಖದಲ್ಲಿ ಪಿಯುಸಿ ವಿಜ್ಞಾನ ವಿಷಯವನ್ನು ಕನ್ನಡ ಮಾಧ್ಯಮದಲ್ಲಿ ನೀಡುತ್ತಿರುವ ಕಾರ್ಯ ಅನನ್ಯ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಆರ್.ಕೆ. ಪಾಟೀಲ, ಗಡಿ ಭಾಗ ಸಂಖದಲ್ಲಿ ನಾವು 60 ವರ್ಷಗಳ ಹಿಂದೆಯೇ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಿದ್ದೇವೆ. ನಾವು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನವನ್ನು ಕನ್ನಡ ಮಾಧ್ಯಮದಲ್ಲಿ ಓದಿ ಸಾಧನೆ ಮಾಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ಆರ್ಥಿಕ ಹೊರೆಯಾಗಬಾರದೆಂದು ವಿವಿಧ ಕೋರ್ಸ್ಗಳನ್ನು ಪ್ರಾರಂಭಿಸಿದ್ದೇವೆ. ನಮ್ಮ ವಿದ್ಯಾರ್ಥಿಗಳು ಕನ್ನಡ ಅಂಕಿಗಳನ್ನೇ ಬರೆಯುವ ಪರಿಪಾಠ ಬೆಳೆಸಿದ್ದೇವೆ ಎಂದು ಹೇಳಿದರು.ಬೈರನಟ್ಟಿಯ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ಕರ್ನಾಟಕ-ಮಹಾರಾಷ್ಟ್ರ ನಡುವೆ ಕರುಳ ಬಳ್ಳಿಯ ಸಂಬಂಧವಿದ್ದು ಗಡಿಭಾಗದ ಕನ್ನಡ ಶಾಲೆಗಳಿಗೆ ಅಲ್ಲಿಯ ಸರ್ಕಾರ ಸಕಲ ಸೌಲಭ್ಯ ಒದಗಿಸಬೇಕು. ಆರ್.ಕೆ. ಪಾಟೀಲರು ಕನ್ನಡದ ಶಕ್ತಿಯಾಗಿ ಕೆಲಸ ಮಾಡುವ ಕಾರ್ಯ ಅನನ್ಯ ಎಂದರು.