ಕನ್ನಡಪ್ರಭ ವಾರ್ತೆ ಬೆಳಗಾವಿಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ನೀವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಿರಿ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆಂಬ ವಿಶ್ವಾಸ ನಮಗಿದೆ. ಆದರೂ ಫಲಿತಾಂಶ ಬರುವವರೆಗೂ ನಾವು ಕಾಯಬೇಕು. ಗೆದ್ದರೇ 8 ವಿಧಾನಸಭೆ ಕ್ಷೇತ್ರದ ಮುಖಂಡರು, ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ತಿಳಿಸಿ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ದುಡಿದ ಸರ್ವರಿಗೂ ಧನ್ಯವಾದಗಳನ್ನು ತಿಳಿಸಿದರು.
ಈ ಲೋಕಸಭೆ ಚುನಾವಣೆಯಲ್ಲಿ ಬರಿ ಪ್ರಧಾನಿ ಮೋದಿ ಅಷ್ಟೇ ಬೇಡ, ಧರ್ಮದ ಆಧಾರಿತ ರಾಜಕೀಯ ಬೇಡವೆಂದು ಎಲ್ಲರೂ ನಿರ್ಧರಿಸಿದ್ದರು. ಅಭಿವೃದ್ಧಿ ಕೆಲಸಗಳನ್ನು ಮಾಡುವವರನ್ನು ಬೆಂಬಲಿಸಬೇಕೆಂದು ಎಲ್ಲರ ಅಭಿಪ್ರಾಯವು ಆಗಿತ್ತು. ಈ ಕೂಗು ಪ್ರಿಯಾಂಕಾಗೆ ಟಿಕೆಟ್ ಸಿಕ್ಕ ಬಳಿಕ ಹೆಚ್ಚಾಯಿತು. ಈ ಚುನಾವಣೆಯಲ್ಲಿ ಬೇರೆ ಪಕ್ಷದವರು ನಮ್ಮನ್ನು ಬೆಂಬಲಿಸಿದ್ದು, ವಿಶೇಷವಾಗಿದೆ ಎಂದರು.ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಾರ್ವಜನಿಕರ, ಕಾರ್ಯಕರ್ತರ ಅಹವಾಲನ್ನು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಶಶಿಕಾಂತ ನಾಯಕ, ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ ರವದಿ, ಮಹಾಂತೇಶ ಮಗದುಮ್ ಸೇರಿದಂತೆ ನೂರಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರು.