ನರೇಗಲ್ಲ: ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳು ದೇಶದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಅಪಾಯಕಾರಿ. ಯಾರು ಸಂವಿಧಾನದ ತಂಟೆಗೆ ಬರುತ್ತಾರೋ ಅವರಿಗೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ರೋಣ ಶಾಸಕ ಜಿ. ಎಸ್. ಪಾಟೀಲ ತಿಳಿಸಿದರು.ಜೈಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿ ಬಳಗ ಮತ್ತು ಜಿ.ಎಸ್. ಪಾಟೀಲ ಅವರ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಡಾ. ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಾವು ದಲಿತರು, ಹಿಂದುಳಿದವರು ಎನ್ನುವ ಬದಲು ನಾವು ಸಮಾನರು ಎನ್ನಬೇಕು. ಈ ಹಿಂದೆ ಬ್ರಿಟಿಷರ ಕಾಲದಲ್ಲಿ ಗೌಡಕಿ ಆಡಲಿತದಲ್ಲಿದ್ದ ತಾರತಮ್ಯ ಈಗ ಇಲ್ಲ. ಡಾ. ಬಾಬಾ ಸಾಹೇಬರು ನೀಡಿದ ಸಂವಿಧಾನದಿಂದ ಪ್ರತಿಯೊಬ್ಬರಿಗೂ ಸಮಾನತೆಯಿಂದ, ಸಹಬಾಳ್ವೆಯಿಂದ ಬದುಕಬಹುದಾಗಿದೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಕೃಷ್ಣಗೌಡ ಎಚ್. ಪಾಟೀಲ ಮಾತನಾಡಿ, ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಭ್ರಾತೃತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ಪ್ರತಿಯೊಬ್ಬ ಭಾರತೀಯನಲ್ಲೂ ಸಹೋದರತ್ವದ ಭಾವನೆ ಇರಬೇಕು ಎಂದರು.ಬಾಗಲಕೋಟೆ ಯುವ ಮುಖಂಡ ವಿನಯ ಆರ್. ತಿಮ್ಮಾಪುರ ಮಾತನಾಡಿದರು. ಈ ಸಂದರ್ಭದಲ್ಲಿ ಆಯೋಜಕ ಮೈಲಾರಪ್ಪ ಚಳ್ಳಮರದ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಣ ಬೂದಿಶ್ವರಮಠದ ಡಾ. ವಿಶ್ವನಾಥ ಸ್ವಾಮಿಗಳು, ನರೇಗಲ್ಲನ ರಹಿಮಾನ ಶಾವಲಿ ದರ್ಗಾದ ಸಯ್ಯದ್ ಮಂಜೂರ ಹುಸೇನ ಶ್ಯಾವಲಿ ಶರಣರು, ಇಟಗಿಯ ಶಿವಶರಣ ಗೆದಿಗೆಪ್ಪಜ್ಜನವರು, ಸೂಡಿ ಮರುಳು ಶಿದ್ದೇಶ್ವರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ವಿಜಯ ಕಲ್ಮನಿ, ಶರಣಪ್ಪ ಬೆಟಗೇರಿ, ಅಲ್ಲಾಬಕ್ಷಿ ನದಾಫ್, ಸಂತೋಷ ಹನಮಸಾಗರ, ಗುಡದಪ್ಪ ಗೋಡಿ, ಎ.ಸಿ. ಪಾಟೀಲ, ಯುಸೂಫ್ ಇಟಗಿ, ಎಂ.ಎಸ್. ಧಡೇಸೂರಮಠ, ಮುತ್ತಪ್ಪ ನೂಲ್ಕಿ, ಹನುಮಂತಪ್ಪ ದ್ವಾಸಲ, ಸದ್ದಾಂ ನಶೇಖಾನ ಇತರರು ಇದ್ದರು.ಶಾಸಕ ಜಿ.ಎಸ್. ಪಾಟೀಲರಿಗೆ ಜೈ ಭೀಮ್ ರತ್ನ ರಾಜ್ಯ ಪ್ರಶಸ್ತಿ ಪ್ರದಾನ
ರೋಣ ಶಾಸಕ ಜಿ.ಎಸ್. ಪಾಟೀಲ ಅವರು ದಲಿತರ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿ, ಕ್ಷೇತ್ರದ ಯುವಕರಿಗೆ ಉದ್ಯೋಗದ ವ್ಯವಸ್ಥೆ ಮಾಡಿಸಿದ್ದಕ್ಕಾಗಿ, ನೆಲ, ಜಲ ಸಂರಕ್ಷಣೆಗೆ ಮಿಡಿಯುತ್ತಿರುವ ಕಾರಣಕ್ಕಾಗಿ ಹಾಗೂ ಏಳು ದಶಕದಿಂದ ಕ್ಷೇತ್ರದ ಜನರೊಂದಿಗೆ ಬೆರೆತಿದ್ದಕ್ಕಾಗಿ ಸಂಘಟನೆಯವರು ಜೈ ಭೀಮ್ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ನಂತರ ವಿವಿಧ ಕ್ಷೇತ್ರದಲ್ಲಿ ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವ ಬೈಲಪ್ಪ ತಳವಾರ, ಬಿ.ವಿ. ಗೌಡರ, ಅರುಣ ಕುಲಕರ್ಣಿ, ವಿ.ಎ. ಕುಂಬಾರ, ಈಶಯ್ಯ ಕಲ್ಲೂರ, ಹನುಮಪ್ಪ ಅಬ್ಬಿಗೇರಿ, ಸುರೇಶ ಹಳ್ಳಿಕೇರಿ ಹಾಗೂ ಚಂದ್ರು ಎಂ. ರಾಥೋಡ್ ಅವರನ್ನು ಸನ್ಮಾನಿಸಲಾಯಿತು.