ಶಿರಾ : ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ ಎಂಬ ಮಹಾತ್ಮಾ ಗಾಂಧೀಜಿಯವರ ಕನಸನ್ನು ನನಸು ಮಾಡಲು ಕಳೆದ ೭೫ ವರ್ಷಗಳಲ್ಲಿ ಅನೇಕ ಬದಲಾವಣೆ ಮಾಡಲಾಗಿದೆ. ಅದರ ಫಲವಾಗಿ ಇಂದು ಗ್ರಾಮ ಪಂಚಾಯಿತಿಗಳು ಸ್ಥಾಪನೆಯಾಗಿವೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಶುಕ್ರವಾರ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಒಂದು ದಿನದ ಕಾರ್ಯಾಗಾರ ಶಿಬಿರ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಗ್ರಾಮಾಡಳಿತದ ಸ್ವರೂಪ ತಂದರು. ಡಾ.ಮನಮೋಹನ್ ಸಿಂಗ್ ಅವರು ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದ್ದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗದ ಕ್ರಾಂತಿಯೇ ಆಗಿದೆ. ನರೇಗಾ ಕೇವಲ ಒಂದು ಯೋಜನೆಯಾಗಿರದೆ ಗ್ರಾಮೀಣರ ಪಾಲಿಗೆ ಕಲ್ಪವೃಕ್ಷವಾಗಿದೆ.
100 ದಿನಗಳ ಉದ್ಯೋಗ ಖಾತರಿ ನೀಡುವದಷ್ಟೇ ಅಲ್ಲದೆ ರೈತರ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಹಾಗೂ ಗ್ರಾಮಾಭಿವೃದ್ಧಿಗಾಗಿ ಸಮುದಾಯ ಕಾಮಗಾರಿಗಳನ್ನು ನೀಡುವ ಮೂಲಕ ಗ್ರಾಮೀಣರಿಗೆ ವರದಾನವಾಗಿದೆ. ಈ ಯೋಜನೆಯನ್ನು ಜಾರಿಗೊಳಿಸಿದ ಕೀರ್ತಿ ಡಾ.ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. 2024 - 25 ರಲ್ಲಿ ಶಿರಾ ತಾಲೂಕಿನಲ್ಲಿ ಸುಮಾರು ೪೦ ಕೋಟಿ ರು. ಉದ್ಯೋಗ ಖಾತ್ರಿಯಡಿ ಖರ್ಚು ಮಾಡಲಾಗಿದೆ ಎಂದರು.
ಜಿಪಂ ಸಿಇಒ ಪ್ರಭು ಮಾತನಾಡಿ, ಗ್ರಾಮ ಪಂಚಾಯಿತಿಗಳ ಸಮಗ್ರ ಆಡಳಿತದ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು, ಇದರೊಂದಿಗೆ ಗ್ರಾಮಗಳ ಶುಚಿತ್ವ, ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಅಬಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿ ಹಾಗೂ ಅಧಿಕಾರಿ ಸಿಬ್ಬಂದಿ ಎಲ್ಲರೂ ಸೇರಿ ಪ್ರತಿ ವರ್ಷ ಒಂದೊಂದು ವಲಯವನ್ನು ತೆಗೆದುಕೊಂಡು ಅದಕ್ಕೆ ಹೊಸ ಸ್ವರೂಪ ಕೊಡಲು ಕೆಲಸ ಮಾಡಬೇಕು. ನರೇಗಾ ಯೋಜನೆಯಡಿ ಸಮಗ್ರ ಶಾಲೆಗಳ ಅಭಿವೃದ್ಧಿ, ಶಾಲಾ ಆಟದ ಮೈದಾನ, ಶಾಲಾ ಶೌಚಾಲಯ, ಕಾಂಪೌಂಡುಗಳ ನಿರ್ಮಾಣ, ಗ್ರಾಮ ಪಂಚಾಯಿತಿ ಕಟ್ಟಡಗಳ ನಿರ್ಮಾಣ ಮಾಡಬಹುದು ಎಂದರು.
ತಾಪಂ ಇಒ ಆರ್.ಹರೀಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸುಮಾರು 23ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಲಾಯಿತು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜು, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕನಕಪ್ಪ ಮೇಲ್ಸಕ್ರಿ, ಸಹಾಯಕ ಕೃಷಿ ನಿರ್ದೇಶಕ ಎಚ್.ನಾಗರಾಜು, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸುಧಾಕರ್, ಬಿಇಒ ಕೃಷ್ಣಪ್ಪ, ಮಾಜಿ ತಾಪಂ ಸದಸ್ಯ ಪಿ.ಬಿ.ನರಸಿಂಹಯ್ಯ, ಎಂ.ಆರ್.ಡಬ್ಲ್ಯೂ ಚಿತ್ತಯ್ಯ, ಮಾಗೋಡು ಕಂಬಣ್ಣ, ಜಗದೀಶ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಣಿಕಂಠ, ನಗರ ಅಧ್ಯಕ್ಷ ಅಂಜನ್ ಕುಮಾರ್ ಸೇರಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.