ಶಿಬರೂರು ಕೊಡಮಣಿತ್ತಾಯ ಕ್ಷೇತ್ರ ಬ್ರಹ್ಮಕಲಶೋತ್ಸವ, ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ನೀಡಿದ ಬೆಳ್ಳಿಕಲಶ ಇಂದು ಸಮರ್ಪಣೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮೂಲ್ಕಿ
ಧರ್ಮ ಮತ್ತದರ ಸಂಸ್ಕಾರವನ್ನು ನಾವು ರಕ್ಷಿಸಿದರೆ ಧರ್ಮವು ನಮ್ಮನ್ನು ರಕ್ಷಿಸುತ್ತದೆ. ಮಕ್ಕಳಿಗೆ ಎಳವೆಯಲ್ಲೇ ಧಾರ್ಮಿಕ ಸಂಸ್ಕಾರ ನೀಡಬೇಕು. ನಾವು ಮಾತ್ರ ಚೆನ್ನಾಗಿ ಬದುಕಿದರೆ ಸಾಲದು ನಮ್ಮ ಜೊತೆ ಇತರರು ಕೂಡ ಬದುಕಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಾಗಮಂಡಲದ ಅಂಗವಾಗಿ ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಧಾರ್ಮಿಕ ವಿದ್ವಾಂಸ ವಿದ್ವಾನ್ ಪಂಜ ಭಾಸ್ಕರ ಭಟ್ ಮಾತನಾಡಿ ಶಿಬರೂರು ಕ್ಷೇತ್ರದ ಪವಿತ್ರ ಮಣ್ಣಿಗೆ ವಿಷವನ್ನು ಶರೀರದಿಂದ ತೆಗೆಯುವ ಶಕ್ತಿಯಿದೆ. ಹಿಂದಿನ ಕಾಲದಲ್ಲಿ ವಿಷ ಜಂತು ಕಡಿದರೆ ಇಲ್ಲಿನ ಮಣ್ಣನ್ನು ಪವಿತ್ರ ಗಂಧವೆಂದು ಕೈಮುಗಿದು ದೇಹಕ್ಕೆ ಮತ್ತು ಬಾಯಿಗೆ ಹಾಕಿ ಸ್ವಾಮಿ ಕೊಡಮಣಿತ್ತಾಯ ಎಂದರೆ ವಿಷದ ಪ್ರಭಾವ ಇಳಿದು ಪ್ರಾಣಕ್ಕೆ ಹಾನಿಯಾಗುವುದು ತಪ್ಪುತ್ತಿತ್ತು. ಇದು ಇಲ್ಲಿನ ದೈವದ ಕಾರಣಿಕ. ಇಂದಿಗೂ ಶಿಬರೂರಿನ ಮಣ್ಣು ವಿಷನಾಶಕ ಎಂದೇ ಕರೆಯಲ್ಪಡುತ್ತಿದೆ. ಉಳ್ಳಾಯ ದೈವ ಮತ್ತು ಕೊಡಮಣಿತ್ತಾಯ ದೈವ ಜನರ ರಕ್ಷಣೆ ಮಾಡುತ್ತಾ ಕ್ಷೇತ್ರದಲ್ಲಿ ನೆಲೆಸಿದ್ದಾರೆ. ಇಲ್ಲಿನ ತೀರ್ಥವನ್ನು ಇಂದಿಗೂ ಮರದ ಮರಾಯಿಯಲ್ಲಿ ತೆಗೆದು ಭಕ್ತರಿಗೆ ಹಂಚಲಾಗುತ್ತಿದೆ. ಇಂತಹ ಪವಿತ್ರ ಸನ್ನಿಧಾನದಲ್ಲಿ ನಡೆಯಲಿರುವ ನಾಗಮಂಡಲ ಸಹಿತ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಸುಸೂತ್ರವಾಗಿ ಜರುಗಲೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಕೊಡಮಣಿತ್ತಾಯ ಮೂಲಕ್ಷೇತ್ರ, ಪಡ್ಯಾರಬೆಟ್ಟುವಿನ ಮೊಕ್ತೇಸರ ಜೀವಂಧರ್ ಕುಮಾರ್ ಯಾನೆ ಕಂಚಿಪೂವಣಿಯವರು ಮಾತನಾಡಿ, ಕೊಡಮಣಿತ್ತಾಯ ನೆಲೆಸಿರುವ ನಮ್ಮ ಮೂಲ ಕ್ಷೇತ್ರವು ದೈವದ ಅನುಗ್ರಹದಿಂದ ಬೆಳಗಿದೆ. ಈ ಕ್ಷೇತ್ರ ಇನ್ನಷ್ಟು ಬೆಳಗಲಿ ಎಂದರು.
ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೋಂಜಾಲುಗುತ್ತು, ಶ್ರೀ ಕೊಡಮಣಿತ್ತಾಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಮಧುಕರ ಅಮೀನ್, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಅಜಿತ್ ಕಿಟ್ಟಣ್ಣ ಶೆಟ್ಟಿ ಕೋಂಜಾಲುಗುತ್ತು, ಭಾರತ್ ಬ್ಯಾಂಕ್ ಮುಂಬೈನ ಆಡಳಿತ ನಿರ್ದೇಶಕ ಸೂರ್ಯಕಾಂತ್ ಜಿ ಸುವರ್ಣ, ಕಿರಣ್, ಪ್ರವೀಣ್ ಶೆಟ್ಟಿ ಸೂರತ್, ಚಂದ್ರಶೇಖರ ಪೂಜಾರಿ, ಶ್ರೀಧರ್ ಎಸ್. ಪೂಜಾರಿ, ದಯಾನಂದ ಶೆಟ್ಟಿ, ಪಂಜ ನಲ್ಯಗುತ್ತು ಪ್ರಕಾಶ್ ಶೆಟ್ಟಿ, ಯಾದವ ಕೃಷ್ಣ ಶೆಟ್ಟಿ, ಗಂಗಾಧರ್ ಪೂಜಾರಿ, ಸಮಿತಿ ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್ ಮತ್ತಿತರರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.
ಶಿಬರೂರು ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಮೇಶ್ ನಾಥ್ ಕದ್ರಿಯವರಿಂದ ಸ್ಯಾಕ್ಸೋಫೋನ್ ವಾದನ, ಮಧ್ಯಾಹ್ನ ಕಟೀಲು ಶ್ರೀ ದುರ್ಗಾ ಮಕ್ಕಳ ಮೇಳದಿಂದ ಯಕ್ಷಗಾನ ,ಸಂಜೆ ಭಕ್ತಿ ರಸಮಂಜರಿ,,ರಾತ್ರಿ ಗಾನನೃತ್ಯ ಅಕಾಡೆಮಿ ಮಂಗಳೂರುನ ವಿದ್ಯಾಶ್ರೀ ರಾಧಕೃಷ್ಣ ಮತ್ತು ಬಳಗದಿಂದ ನೃತ್ಯ ಸಂಗಮ,ಪಿಂಗಾರ ಕಲಾವಿದರು ಬೆದ್ರ ತಂಡದಿಂದ ಕದಂಬ ನಾಟಕ ಪ್ರದರ್ಶನ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.