ಕನ್ನಡಪ್ರಭ ವಾರ್ತೆ ರಾಮನಗರಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬೇಕಾದರೆ ಶಾಸಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ರವರ ಆಶೀರ್ವಾದ ಪಡೆದುಕೊಳ್ಳಲಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.ಮಾಗಡಿ ಕ್ಷೇತ್ರ ವ್ಯಾಪ್ತಿಯ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಆಶೀರ್ವಾದದಿಂದಾಗಿ ಮಾಗಡಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಕೊರತೆ ಉಂಟಾಗಿಲ್ಲ. ಬರುತ್ತಿರುವ ಅನುದಾನದ ಬಗ್ಗೆ ತೃಪ್ತಿಯಿದೆ ಎಂದರು.
ಸಿದ್ದರಾಮಯ್ಯರವರು ಬಜೆಟ್ನಲ್ಲಿ ಪ್ರತಿಯೊಬ್ಬ ಶಾಸಕರಿಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರುಪಾಯಿ ಅನುದಾನ ನೀಡುವ ಘೋಷಣೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆ ಅನುದಾನ ಬರಲಿದೆ. ಸಚಿವರು ಗೌರವ ಕೊಡುತ್ತಿದ್ದಾರೊ ಇಲ್ಲವೊ ಎಂಬುದನ್ನು ಸೂಕ್ತ ವೇದಿಕೆಗಳಲ್ಲಿ ಶಾಸಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು ಎಂದು ತಿಳಿಸಿದರು.
ಕೇಂದ್ರ ನಮ್ಮ ಪಾಲಿನ ಅನುದಾನ ನೀಡಲಿ:ಕೇಂದ್ರ ಸರ್ಕಾರ ನೀಡಬೇಕಾದ ನಮ್ಮ ಪಾಲಿನ ಅನುದಾನ ಕೊಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಆ ಅನುದಾನವನ್ನೂ ನೀಡಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯಕೈಗೊಳ್ಳಲು ಸಾಧ್ಯವೆಂದು ಪರಮೇಶ್ವರ್ ಹೇಳಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಕೆಲವೊಂದು ಸಂದರ್ಭಗಳಲ್ಲಿ ಏರುಪೇರಾದಾಗ ಮನಸ್ಸಿಗೆ ಬೇಸರ ಉಂಟಾಗುತ್ತದೆ. ಆಗ ಸಮಸ್ಯೆ ಬಗೆಹರಿಯುವುದಿಲ್ಲ. ರಾಜು ಕಾಗೆ ಸಿಎಂ ಮತ್ತು ಡಿಸಿಎಂ ಬಳಿ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.ರಾಜೀನಾಮೆ ಕೊಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ನಾನು ರಾಜೀನಾಮೆ ನೀಡಿದರೆ ಉಪಚುನಾವಣೆ ನಡೆಯುತ್ತದೆ. ಮತ್ತೊಬ್ಬರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಆಗ ಸಮಸ್ಯೆ ಬಗೆಹರಿಯುತ್ತದೆಯೇ. ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ಹೋರಾಟ ಮಾಡಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಎಂದು ಹೇಳಿದರು.ಇಡಿಯವರು ಬಿಜೆಪಿಯವರನ್ನು ಎಂದೂ ಟಾರ್ಗೆಟ್ ಮಾಡುವುದಿಲ್ಲ. ಕಾಂಗ್ರೆಸ್ ನವರನ್ನು ಟಾರ್ಗೆಟ್ ಮಾಡುವುದೇ ಅವರ ಉದ್ದೇಶ. ಡಿ.ಕೆ.ಸುರೇಶ್ ಅವರನ್ನು ಇಡಿರವರು ವಿಚಾರಣೆ ಮಾಡುತ್ತಿಲ್ಲ. ಬಿಜೆಪಿಯವರು ವಿಚಾರಣೆ ಮಾಡುತ್ತಿದ್ದಾರೆ. ಆದ್ದರಿಂದ ಇನ್ನು ಮುಂದೆ ಬಿಜೆಪಿಯವರ ಇಡಿ ವಿಚಾರಣೆ ಎಂದು ಹೇಳಬಹುದು ಎಂದು ಬಾಲಕೃಷ್ಣ ಕಿಡಿಕಾರಿದರು.ಕಾಂಗ್ರೆಸ್ ಪಕ್ಷದ ಶಾಸಕರೇ ವಸತಿ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ನೀಡಬೇಕೆಂದು ಕೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಇದು ಆ ಶಾಸಕರ ವೈಯಕ್ತಿಕ ಅಭಿಪ್ರಾಯ. ರಾಜೀನಾಮೆ ಬಗ್ಗೆ ಅವರನ್ನೇ ಕೇಳಬೇಕು. ನನಗೆ ತಿಳಿದಿರುವ ಮಟ್ಟಕ್ಕೆ ಜಮೀರ್ ರವರ ಇಲಾಖೆಯಲ್ಲಿ ಅಂತಹ ಭ್ರಷ್ಟಾಚಾರ ನಡೆದಿಲ್ಲ ಎಂದರು.ಕೇಂದ್ರ ಸಚಿವ ಕುಮಾರಸ್ವಾಮಿರವರು ನನಗೇನಾದರು ಸಿಎಂ ಹುದ್ದೆ ಸಿಗುತ್ತದೆಯೇನೊ ಎಂದು ಕನಸು ಕಾಣುತ್ತಿದ್ದಾರೆ. ಚುನಾವಣೆ ಬಂದಾಗ ಜನರು ಯಾರು ಮುಖ್ಯಮಂತ್ರಿ ಆಗಬೇಕೆಂದು ತೀರ್ಮಾನ ಮಾಡುತ್ತಾರೆ. ಈಗಿರುವ ಮುಖ್ಯಮಂತ್ರಿ - ಉಪಮುಖ್ಯಮಂತ್ರಿ ಸರಿ ಇಲ್ಲ ಎಂದರೆ ಬೇರೆಯವರಿಗೆ ಅವಕಾಶ ನೀಡುತ್ತಾರೆ. ಆಗ ಕುಮಾರಸ್ವಾಮಿ ಅಥವಾ ಬಿಜೆಪಿಯವರು ಸಿಎಂ ಆಗುತ್ತಾರೊ ಗೊತ್ತಿಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಅವಕಾಶ ನೀಡಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ , ಬನ್ನಿಕುಪ್ಪೆ (ಬಿ) ಗ್ರಾಪಂ ಅಧ್ಯಕ್ಷ ವಿ.ಆರ್.ಹೊಂಬೇಗೌಡ, ಮಂಚನಾಯಕನಹಳ್ಳಿ ಗ್ರಾಪಂ ಅಧ್ಯಕ್ಷೆ ರಮ್ಯಾ ಧನಂಜಯ್ಯ, ಮುಖಂಡರಾದ ನರಸಿಂಹಯ್ಯ ಮತ್ತಿತರರು ಹಾಜರಿದ್ದರು.
ಮಾಗಡಿ ಕ್ಷೇತ್ರ ವ್ಯಾಪ್ತಿಯ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಂಗಳೂರು - ಮೈಸೂರು ಮುಖ್ಯ ರಸ್ತೆಯಿಂದ ಹೆಜ್ಜಾಲ ಕ್ಷಿಪ್ರ ಗಣಪತಿ ದೇವಸ್ಥಾನ - ದೊಡ್ಡರಿ ಮುಖಾಂತರ ಕೆಂಪದ್ಯಾಪನಹಳ್ಳಿ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು.