ಹೊಸಪೇಟೆ: ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ, ಹಂಪಿ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.
ನದಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡವನ್ನು ಸ್ವಯಂ ತೆರವು ಮಾಡಿಕೊಳ್ಳುವ ಪ್ರಮೇಯವು ನಡೆಯಿತು. ಪ್ರಾಧಿಕಾರದ ಅಧಿಕಾರಿಗಳು ಈ ಕಟ್ಟಡದ ಬಳಿಯೂ ತೆರಳಿ ಪರಿಶೀಲನೆ ನಡೆಸಿದರು.
ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ರಂಗನಾಥ, ತಹಸೀಲ್ದಾರ್ ಶ್ರುತಿ ಎಂ.ಎಂ., ಪುರಾತತ್ವ ಇಲಾಖೆಯ ಅಧಿಕಾರಿಗಳಾದ ಭರಣಿಧರನ್, ತೇಜೇಶ್ವರ, ಪಿಡಿಒ ಗಂಗಾಧರ, ಪಿಎಸ್ಐ ಶಿವಕುಮಾರ ನಾಯ್ಕ ಮತ್ತಿತರರಿದ್ದರು.ರಾಜಕಾರಣಿಗಳ ಒತ್ತಡ:
ಹಂಪಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಬಾರದು ಎಂದು ನ್ಯಾಯಾಲಯದ ಆದೇಶವಿದ್ದರೂ ಇದನ್ನು ಉಲ್ಲಂಘಿಸಿ ಕಂದಾಯ ಹಾಗೂ ಕೃಷಿ ಜಮೀನುಗಳಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿವೆ. ಈ ನಡುವೆ ತೆರವುಗೊಳಿಸಲು ಅಧಿಕಾರಿಗಳು ಮುಂದಾದರೆ, ರಾಜಕೀಯ ಒತ್ತಡ ಹೇರಲಾಗುತ್ತಿದೆ. ಹಾಗಾಗಿ ಅಧಿಕಾರಿಗಳು ಈಗ ಸದ್ಯಕ್ಕೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ.
ಹಂಪಿ ಅಭಿವೃದ್ಧಿ ಪ್ರಾಧಿಕಾರ ಸದ್ಯ ಎರಡು ಕಟ್ಟಡಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಆದರೆ, ಕೃಷಿ ಮತ್ತು ಕಂದಾಯ ಜಾಗಗಳಲ್ಲಿ 45ಕ್ಕೂ ಅಧಿಕ ಅಕ್ರಮ ಕಟ್ಟಡಗಳು ತಲೆ ಎತ್ತಿವೆ. ಈ ಕಟ್ಟಡಗಳನ್ನು ತೆರವುಗೊಳಿಸಲಿದ್ದಾರೆ ಎಂಬ ಆತಂಕದಿಂದ ರಾಜಕೀಯ ಒತ್ತಡ ತರಲಾಗುತ್ತಿದೆ ಎಂದು ವಿಜಯನಗರ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.ಒಂದು ಕಡೆಯಲ್ಲಿ ಅಕ್ರಮ ಕಟ್ಟಡ ತೆರವು ಮಾಡಲು ಹೊರಟರೆ, ರಾಜಕೀಯ ಒತ್ತಡ ತರುತ್ತಿರುವುದು ಅಧಿಕಾರಿಗಳಿಗೂ ಬೇಸರ ತರಿಸಿದೆ. ನ್ಯಾಯಾಲಯದ ಆದೇಶ ಹಾಗೂ ನಿಯಮಾವಳಿ ಪ್ರಕಾರವೇ ಕಾರ್ಯಾಚರಣೆ ನಡೆಸುವ ಇರಾದೆಯನ್ನು ಜಿಲ್ಲಾಡಳಿತ ಹೊಂದಿದೆ. ಈ ರೀತಿ ಅಕ್ರಮ ಕಟ್ಟಡದವರಿಗೆ ರಾಜಕೀಯ ವ್ಯಕ್ತಿಗಳು ಬೆಂಬಲ ನೀಡಿದರೆ ಹೇಗೆ ಎಂಬ ಪ್ರಶ್ನೆಯೂ ಈಗ ಎದ್ದಿದೆ.