ಬಳ್ಳಾರಿ: ಬಳ್ಳಾರಿ ತಾಲೂಕು ವ್ಯಾಪ್ತಿಯ ಆಲದಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರ ಆದೇಶದನ್ವಯ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮತ್ತು ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಬಳ್ಳಾರಿ ತಹಸೀಲ್ದಾರ್ ಟಿ. ರೇಖಾ ಅವರ ನೇತೃತ್ವದ ತಂಡವು ಸ್ಥಳಕ್ಕೆ ಧಾವಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆಯಿತು.
ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ಗೋಡೆಗಳು, ಬೇಲಿ ಹಾಗೂ ಇತರ ತಾತ್ಕಾಲಿಕ ರಚನೆಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ಸಂಪೂರ್ಣವಾಗಿ ಧ್ವಂಸಗೊಳಿಸಲಾಯಿತಲ್ಲದೆ, ಸಾರ್ವಜನಿಕರ ಮಾಹಿತಿಗಾಗಿ ಜಾಗೃತಿ ಫಲಕ ಅಳವಡಿಸಲಾಯಿತು.ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಅತಿಕ್ರಮಣ ಮಾಡಿಕೊಂಡಿರುವ ದಾಖಲೆಗಳನ್ನು ಪರಿಶೀಲಿಸಿ, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ರಾಜಕೀಯ ನಾಯಕರ ಬೆಂಬಲದಿಂದ ಅನೇಕ ವರ್ಷಗಳಿಂದ ಬಳ್ಳಾರಿಯಲ್ಲಿ ಸರ್ಕಾರಿ ಜಮೀನನನ್ನು ಅತಿಕ್ರಮಣ ಮಾಡಿದ್ದರು. ಇನ್ನೂ ಸಾಕಷ್ಟು ಜಮೀನುಗಳನ್ನು ತೆರವುಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುತ್ತಿದೆ. ಯಾವುದೇ ರಾಜಕೀಯ ಒತ್ತಡ ಹಾಗೂ ಪ್ರಭಾವಕ್ಕೆ ಜಗ್ಗುವುದಿಲ್ಲ. ಸರ್ಕಾರದ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳುವುದು ಅಪರಾಧವಾಗಿದ್ದು, ತಾವಾಗಿಯೇ ತೆರವುಗೊಳಿಸಿದರೆ ಸರಿ. ಇಲ್ಲವಾದರೆ ಜಿಲ್ಲಾಡಳಿತವೇ ಕ್ರಮ ಜರುಗಿಸಲಿದೆ ಎಂದು ಅಧಿಕಾರಿಗಳು ''''ಕನ್ನಡಪ್ರಭ''''ಕ್ಕೆ ತಿಳಿಸಿದರು.