ದೊಡ್ಡಬಳ್ಳಾಪುರ: ಇನಾಮ್ತಿ ಜಮೀನು, ಗುಂಡು ತೋಪಿನ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಡಲಾಗಿದ್ದು, ಭೂಗಳ್ಳರು ಹಾಗೂ ಅವರಿಗೆ ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಡತಿಪ್ಪೂರು, ತಣ್ಣೀರನಹಳ್ಳಿ, ಮುಡ್ಲಕಾಳೇನಹಳ್ಳಿಗಳ ಗ್ರಾಮಸ್ಥರು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಅಲ್ಲದೆ, ಸರ್ವೇ ನಂಬರ್ 50ರ ಗುಂಡುತೋಪು ಸ್ಥಳವನ್ನು ಅಕ್ರಮವಾಗಿ ಖಾತೆ ಮಾಡಿದ್ದು ಕೂಡಲೇ ಖಾತೆ ರದ್ದು ಪಡಿಸಬೇಕು. ಸರ್ವೇ ನಂಬರ್ 2 ರಲ್ಲಿ ಪರಿಶಿಷ್ಟ ಪಂಗಡದ ಕುಟುಂಬಗಳು ವಾಸಿಸುತ್ತಿದ್ದು, ಸದರಿ ನಿವಾಸಿಗಳಿಗೆ ಖಾತೆ ಮಾಡಿಕೊಡುವ ಮೂಲಕ ಶಾಶ್ವತ ನಿವೇಶನ ಕಲ್ಪಿಸಬೇಕೆಂದು ಮನವಿ ಮಾಡಿದರು.
ಗ್ರಾಮಸ್ಥ ರಾಜಣ್ಣ ಮಾತನಾಡಿ, ಅರಸೇಶ್ವರಿ ಅಮ್ಮನವರ ಜಾತ್ರೆ ಎಂದರೆ ಅದು ನಮ್ಮ ಹೆಮ್ಮೆ, ನಿರಂತರ ಏಳು ದಿನಗಳ ಕಾಲ ನಡೆಯುವ ಈ ಜಾತ್ರಾಮಹೋತ್ಸವ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ದೇವಾಲಯದ ಜಮೀನು ಖಾಸಗಿದಾರರಿಗೆ ಖಾತೆ ಮಾಡಿಕೊಟ್ಟಿರುವ ಹಿನ್ನೆಲೆ ಸ್ಥಳದ ಅಭಾವದಿಂದ ಜಾತ್ರೆ ಮಾಡಲು ತೊಂದರೆ ಉಂಟಾಗುತ್ತಿದೆ. ತಾಲೂಕು ಆಡಳಿತ ಮಧ್ಯಪ್ರವೇಶಿಸಿ ಜಾತ್ರೆ ನಿರ್ವಘ್ನವಾಗಿ ನಡೆಯುವಂತೆ ಸಹಕರಿಸಬೇಕು ಎಂದು ತಿಳಿಸಿದರು.ತಾಪಂ ಮಾಜಿ ಅಧ್ಯಕ್ಷೆ ದೇವರಾಜಮ್ಮ ಮಾತನಾಡಿ, ಹಲವು ಬಾರಿ ಪಂಚಾಯ್ತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಹಾಗಾಗಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದೇವೆ. ಈ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಒತ್ತಾಯಿಸಿದರು.
10ಕೆಡಿಬಿಪಿ5-
ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಕಾಡತಿಪ್ಪೂರು, ತಣ್ಣೀರನಹಳ್ಳಿ, ಮುಡ್ಲಕಾಳೇನಹಳ್ಳಿ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.