ಗದಗ: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮತ್ತು ಅಪರಾಧದ ಮೂಲಕ ಗಳಿಸಿದ ಸಂಪತ್ತನ್ನು ವಶಪಡಿಸಿಕೊಳ್ಳಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಿದ್ದು, ಮಂಗಳವಾರ (ಸೆ.9) ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಗಣಿ ಅಕ್ರಮ ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕ ಅಧಿನಿಯಮ - 2025 ಈಗ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಯಲ್ಲಿದೆ. ಈ ಹೊಸ ಕಾನೂನು ಕನ್ನಡಿಗರ ಆಸ್ತಿಯನ್ನು ಕನ್ನಡಿಗರಿಗೆ ಮರಳಿ ತರುವ ಕೆಲಸ ಮಾಡಲಿದೆ ಎಂದು ಹೇಳಿದರು.ಹೊಸ ಕಾನೂನು ಜಾರಿಯ ಹಾದಿ: ಈ ಮಹತ್ವದ ಕಾನೂನು ರಚನೆಯ ಹಿಂದಿನ ಪ್ರಕ್ರಿಯೆಯನ್ನು ವಿವರಿಸಿದ ಸಚಿವರು, ಜು. 2ರಂದು ನಂದಿ ಬೆಟ್ಟದಲ್ಲಿ ನಡೆದ ಸಭೆಯಲ್ಲಿ ಗಣಿ ಹಗರಣದ ಬಗ್ಗೆ ಚರ್ಚೆ ನಡೆಸಿದ ಆನಂತರ, ಉಪ ಸಮಿತಿಯೊಂದನ್ನು ರಚಿಸುವ ಪ್ರಸ್ತಾಪ ಮಾಡಲಾಯಿತು. ಜು. 5ರಂದು ಈ ಕುರಿತು ಕ್ಯಾಬಿನೆಟ್ ಉಪ ಸಮಿತಿ ನೇಮಕ ಮಾಡಲಾಯಿತು. ಒಂದು ತಿಂಗಳ ನಂತರ ಉಪ ಸಮಿತಿ ತನ್ನ ಕೆಲಸ ಪೂರ್ಣಗೊಳಿಸಿ ವರದಿ ಸಲ್ಲಿಸಿತು. ಈ ವರದಿಯ ಆಧಾರದಲ್ಲಿ ವಸೂಲಾತಿ ಆಯುಕ್ತರ ನೇಮಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಆ. 18ರಂದು ಕ್ಯಾಬಿನೆಟ್ ಒಪ್ಪಿದ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ವಿಧಾನ ಪರಿಷತ್ನಲ್ಲಿಯೂ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಸೆ. 9ರಂದು ರಾಜ್ಯಪಾಲರು ಈ ಮಸೂದೆಗೆ ಅಂಕಿತ ಹಾಕಿದ್ದಾರೆ ಎಂದರು.
ಈ ಹೊಸ ಕಾನೂನು ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲ ಕಲ್ಪಿಸಲಿದೆ. ಅಕ್ರಮ ಗಣಿಗಾರಿಕೆಯಿಂದ ಗಳಿಸಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು, ಅವುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಇದು ಈ ನೂತನ ಕಾನೂನಿನ ಉದ್ದೇಶವಾಗಿದೆ ಎಂದು ಪಾಟೀಲ್ ಹೇಳಿದರು.ಸಚಿವ ಸಂಪುಟ ಉಪ ಸಮಿತಿ ರೂಪಿಸಿದ ಯೋಜನೆ ಪ್ರಕಾರವೇ ಈ ಕಾನೂನನ್ನು ಜಾರಿ ಮಾಡಲಾಗಿದ್ದು, ಸಮಯಕ್ಕೆ ಸರಿಯಾಗಿ ಕೆಲಸ ಮಾಡಿ ರಾಜ್ಯದ ಸಂಪತ್ತನ್ನು ಮರಳಿ ತರುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.ಅಕ್ರಮ ಗಣಿಗಾರಿಕೆ ವಿಷಯವಾಗಿ ಈ ಹಿಂದೆಯೇ ಲೋಕಾಯುಕ್ತ ನ್ಯಾಯಮೂರ್ತಿಗಳು ಸಲ್ಲಿಸಿದ ವರದಿಯಲ್ಲಿ 78 ಸಾವಿರ ಕೋಟಿ ಎಂದು ಉಲ್ಲೇಖಿಸಿದ್ದರು. ಇದು ಅಂದಿನ ದರದಲ್ಲಿ. ಈಗ ಇನ್ನೂ ಹೆಚ್ಚಾಗಲಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.