ಅಕ್ರಮವಾಗಿ ಆಸ್ತಿ ಮಾರಾಟ: ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

KannadaprabhaNewsNetwork |  
Published : Apr 18, 2026, 02:15 AM IST
ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿ ಆಡಳಿತ ಮಂಡಳಿಯ ಕೆಲವು ಪದಾಧಿಕಾರಿಗಳು ಹಾಗೂ ಅವರ ಕುಟುಂಬ ಸದಸ್ಯರ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ.

ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿ ಆಡಳಿತ ಮಂಡಳಿಯ ಕೆಲವು ಪದಾಧಿಕಾರಿಗಳು ಹಾಗೂ ಅವರ ಕುಟುಂಬ ಸದಸ್ಯರ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರಸ್ತುತ ಆಡಳಿತ ಮಂಡಳಿಯನ್ನು ವಜಾ ಮಾಡಿ, ಆಸ್ತಿಯನ್ನು ಮತ್ತೆ ಸಂಸ್ಥೆಯ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಶುಕ್ರವಾರ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

1965ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಏಕೀಕರಣ ಚಳವಳಿಯ ನಾಯಕರಾದ ಗುದ್ಲೆಪ್ಪ ಹಳ್ಳಿಕೇರಿ ಅವರಿಂದ ಸ್ಥಾಪಿತವಾದ ಈ ಶಿಕ್ಷಣ ಸಂಸ್ಥೆ, ದಾನಿಗಳ ಸಹಕಾರದಿಂದ ಬೆಳೆದು, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ. ಆದರೆ ಇತ್ತೀಚೆಗೆ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಅವ್ಯವಹಾರ ಹೆಚ್ಚಾಗಿದ್ದು, ಸ್ವಜನ ಪಕ್ಷಪಾತದ ಆರೋಪಗಳು ಕೇಳಿಬರುತ್ತಿವೆ. ಸಂಸ್ಥೆಗೆ ಸೇರಿದ ಹೊಸರಿತ್ತಿ ಗ್ರಾಮದ ಸರ್ವೆ ನಂ. 71/ಬಿ ಆಸ್ತಿಯನ್ನು ಪದವಿ ಕಾಲೇಜು ಕಟ್ಟಡ ನಿರ್ಮಾಣದ ನೆಪದಲ್ಲಿ ಕಡಿಮೆ ಬೆಲೆಗೆ ಆಡಳಿತ ಮಂಡಳಿಯ ಕೆಲವು ಸದಸ್ಯರು ಹಾಗೂ ಅವರ ಬಂಧುಗಳ ಹೆಸರಿಗೆ ಖರೀದಿಸಿಕೊಂಡಿದ್ದಾರೆ ಎಂದು ಮನವಿ ಪತ್ರದಲ್ಲಿ ದೂರಿದ್ದಾರೆ.

ಪ್ರತಿ 55.70 ಚದರ ಮೀಟರ್ ಜಾಗಕ್ಕೆ ಮಾರುಕಟ್ಟೆಯಲ್ಲಿ ಕನಿಷ್ಠ ₹30 ಲಕ್ಷ ಬೆಲೆ ಇದ್ದರೂ, ಕೇವಲ ₹2 ಲಕ್ಷಕ್ಕೆ ನೋಂದಣಿ ಮಾಡಲಾಗಿದೆ. ಇದರಿಂದ ಪ್ರತಿ ಪ್ಲಾಟ್‌ಗೆ ಸುಮಾರು ₹28 ಲಕ್ಷ ನಷ್ಟ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕ್ರಮವು ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್ 60 ಮತ್ತು 61ರ ಉಲ್ಲಂಘನೆಯಾಗಿದ್ದು, ಸರ್ಕಾರದ ಅನುದಾನ ಪಡೆಯುವ ಸಂಸ್ಥೆಯ ಆಸ್ತಿಯನ್ನು ಮಾರಾಟ ಮಾಡುವಾಗ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸಿಲ್ಲ. ಅಲ್ಲದೇ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ (ಕೆಪಿಟಿಟಿ) 1999ರ ನಿಯಮಗಳನ್ನು ಉಲ್ಲಂಘಿಸಿ ಬಹಿರಂಗ ಹರಾಜು ನಡೆಸದೇ ಆಸ್ತಿಯನ್ನು ಮಾರಾಟ ಮಾಡಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆಡಳಿತ ಮಂಡಳಿಯ ಸದಸ್ಯರಾದ ಸಿದ್ಧಲಿಂಗಪ್ಪ ಹಳ್ಳಿಕೇರಿ ಹಾಗೂ ವೀರಣ್ಣ ಅರಳಿ ಸಭೆಯಲ್ಲಿ ಈ ಅಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರೂ, ಅವರ ಮಾತುಗಳನ್ನು ಇತರರು ಪರಿಗಣಿಸಿಲ್ಲ, ಇದಲ್ಲದೆ, ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಲಾದ ಆಸ್ತಿ ವಿವರಗಳ ಮಾಹಿತಿಯನ್ನು ಸಂಸ್ಥೆಯ ಕಾರ್ಯದರ್ಶಿ ನೀಡಲು ನಿರಾಕರಿಸಿರುವುದರಿಂದ ಅನುಮಾನಗಳು ಇನ್ನಷ್ಟು ಗಾಢವಾಗಿವೆ. ಈ ಹಿನ್ನೆಲೆಯಲ್ಲಿ, ಪ್ರಸ್ತುತ ಆಡಳಿತ ಮಂಡಳಿ ವಜಾ ಮಾಡಬೇಕು, ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಮಾಡಬೇಕು, ಅಕ್ರಮವಾಗಿ ಖರೀದಿಸಿದ ಆಸ್ತಿಗಳ ನೋಂದಣಿ ರದ್ದುಪಡಿಸಿ ಸಂಸ್ಥೆಯ ವಶಕ್ಕೆ ಪಡೆಯಬೇಕು ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.

ಬಸವರಾಜ ಮರಳಿಹಳ್ಳಿ, ಐ.ಜಿ. ಕೋರಿ, ಸಿ.ಕೆ. ಹಳ್ಳಿಕೇರಿ, ಎಂ.ಬಿ. ಮುಂಡರಗಿ, ನಿರಂಜನ ಪರಂಗಿ, ಸಿದ್ದಲಿಂಗಪ್ಪ ಕಲಕೋಟಿ, ಮುತ್ತಯ್ಯ ಕಿತ್ತೂರಮಠ, ಕೆ.ಸಿ. ಕೋರಿ, ಮಲ್ಲಣ್ಣ ಹಳ್ಳಿಕೇರಿ, ಸಿದ್ದಣ್ಣ ಹಳ್ಳಿಕೇರಿ, ರುದ್ರಪ್ಪ ಯತ್ನಳ್ಳಿ, ರವಿ ಚಂದ್ರಗಿರಿ, ಸಿದ್ದಲಿಂಗಪ್ಪ ರಾಚನಾಯ್ಕರ್, ಗುದ್ಲೆಪ್ಪ ಸವಣೂರ, ಆನಂದ ಮುರಡೆಪ್ಪನವರ, ಶಂಭಣ್ಣ ಶಾಬಳದ, ಬಿ.ಎಸ್. ದೊಡ್ಡಮನಿ, ಎಸ್.ಜಿ. ದೀಪಾಳಿ, ರವಿ ಗಾಣಗೇರ ಹಾಗೂ ಹೊಸರಿತ್ತಿ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಚ್ಚುವರಿ ಡಯಾಲಿಸಿಸ್ ಘಟಕ ಆರಂಭಿಸುವಂತೆ ಆಗ್ರಹ
ನರಗುಂದ ತಾಲೂಕಿನಲ್ಲಿ ಬಾರದ ಖಾಲಿ ಚೀಲ: ಕಡಲೆ ಖರೀದಿ ಕೇಂದ್ರಗಳೇ ಬಂದ್!