ದೊಡ್ಡಬಳ್ಳಾಪುರ: ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ನಗರಸಭೆ, ಮಕ್ಕಳ ಸಹಾಯವಾಣಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಂಟಿ ದಾಳಿ ನಡೆಸಲಾಗಿದೆ.
ಕಳೆದ ಫೆಬ್ರವರಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಉಪಸ್ಥಿತಿಯಲ್ಲಿ ನಡೆದ ''''''''ಮಕ್ಕಳ ಹಕ್ಕುಗಳ ನಗರಸಭೆ'''''''' ಕಾರ್ಯಕ್ರಮದಲ್ಲಿ, ಶಾಲಾ ಮಕ್ಕಳು ತಮ್ಮ ಶಾಲೆಯ ಆವರಣದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ಮತ್ತು ಮಾದಕ ವಸ್ತುಗಳ ಬಳಕೆಯ ಬಗ್ಗೆ ದೂರು ನೀಡಿದ್ದರು. ನಗರಸಭೆ ಹಾಗೂ ಯುವ ಸಂಚಲನ ಟ್ರಸ್ಟ್ ಸಹಯೋಗದಲ್ಲಿ ನಡೆದ ಆ ಸಭೆಯಲ್ಲಿ ಇಲಾಖಾ ಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಜೊತೆಗೆ ಯುವ ಸಂಚಲನ ತಂಡದಿಂದ ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ತರಲಾಗಿತ್ತು ಈ ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಆವರಣದ ಸುತ್ತಮುತ್ತ ಇಂತಹ ಪದಾರ್ಥಗಳ ಮಾರಾಟವನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.ಆರಕ್ಷಕ ನಿರೀಕ್ಷಕ ಅಮರೇಶ್ ಗೌಡ, ನಗರಸಭೆಯ ಪರಿಸರ ಅಭಿಯಂತರರಾದ ಈರಣ್ಣ, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಚಿದಾನಂದ್ ಮೂರ್ತಿ,ಮಕ್ಕಳ ಸಹಾಯವಾಣಿ ಮೇಲ್ವಿಚಾರಕರಾದ ಸೌಮ್ಯ ಜೆ, ನಗರಸಭೆ ಆರೋಗ್ಯ ನಿರೀಕ್ಷಕ ಕಾಂತರಾಜು ಹಾಗೂ ಪ್ರಸಾದ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.