ಡಿ. 14ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿ ಉಲ್ಲೇಖಿಸಿ ಪ್ರಕರಣ । ಎರಡು ವಾರದಲ್ಲಿ ವರದಿ ನೀಡುವಂತೆ ಸೂಚನೆ
ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಲೋಕಾಯುಕ್ತ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆಗೆ ಮುಂದಾಗಿದೆ.
‘ಹೇಮೆ’ ದಡದಲ್ಲಿ ಅಕ್ರಮ ಮರಳು ದಂಧೆ ಎನ್ನುವ ತಲೆ ಬರಹದಡಿ ಅಕ್ರಮ ಗಣಿಗಾರಿಕೆ ಬಗ್ಗೆ ಕಳೆದ 2023ರ ಡಿಸೆಂಬರ್ 14ರಂದು ಕನ್ನಡಪ್ರಭ ವರದಿ ಮಾಡಿತ್ತು. ಮೌನವಹಿಸಿರುವ ಅಧಿಕಾರಿಗಳು, ಜನಪ್ರತಿನಿಧಿಗಳ ಬಗ್ಗೆ, ಮರಳನ್ನು ಅಕ್ರಮವಾಗಿ ಫಿಲ್ಟರ್ ಮಾಡಿ ಸಾಗಿಸಲಾಗುತ್ತಿದ್ದ ಬಗ್ಗೆ ತಿಳಿಸಿದ್ದು, ಈ ಕೃತ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶವೂ ವ್ಯಕ್ತವಾಗಿತ್ತು.ಕನ್ನಡಪ್ರಭ ವರದಿಯಿಂದ ಎಚ್ಚೆತ್ತಿರುವ ಲೋಕಾಯುಕ್ತರು, ವರದಿಯನ್ನು ಉಲ್ಲೇಖಿಸಿ 2024ರ ಜ. 1ರಂದು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಅಕ್ರಮ ಮರಳು ಗಣಿಗಾರಿಕೆಯ ಸಮಗ್ರ ತನಿಖೆಗೆ ಮುಂದಾಗಿದ್ದಾರೆ.
ಪತ್ರಿಕಾ ವರದಿ ಆಧರಿಸಿ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಸುಮೋಟೊ ಕೇಸ್ ದಾಖಲಿಸಿ ತಹಸೀಲ್ದಾರ್ ನಿಸರ್ಗಪ್ರಿಯ, ತಾಪಂ ಇಒ ಸತೀಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತಾಲೂಕು ಅಧಿಕಾರಿ ಮಹೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮಾ, ಕಿಕ್ಕೇರಿ ಪೊಲೀಸ್ ನಿರೀಕ್ಷಕಿ ರೇವತಿ, ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ನಿರೀಕ್ಷಕ ಪಿ.ಜಗದೀಶ್ ಮತ್ತು ಪಟ್ಟಣ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕಿ ಸುಮಾರಾಣಿ ಅವರನ್ನು ಹೊಣೆಗಾರರನ್ನಾಗಿಸಲಾಗಿದೆ.
ಪತ್ರಿಕಾ ವರದಿಯಲ್ಲಿ ಉಲ್ಲೇಖಿತವಾಗಿರುವ ಸ್ಥಳ ಪರಿಶೀಲನೆ ನಡೆಸಿ ವರ್ತಮಾನದ ಸ್ಥಿತಿಗತಿಗಳ ಬಗ್ಗೆ ವೀಡಿಯೊ ಮತ್ತು ಪೋಟೋ ಸಮೇತ ಎರಡು ವಾರಗಳಲ್ಲಿ ವರದಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.