ಧಾರವಾಡ:
ಇಲ್ಲಿಯ ಆಲೂರು ವೆಂಕಟರಾವ್ ಭವನದಿಂದ ಜ್ಯುಬಿಲಿ ವೃತ್ತ, ಅಲ್ಲಿಂದ ಕೋರ್ಟ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ನಡೆಸಿದ ಪರಿಸರವಾದಿಗಳು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಪರಿಸರವಾದಿ ಡಾ. ಸಂಜೀವ ಕುಲಕರ್ಣಿ, ಮಲೆನಾಡು, ಕರಾವಳಿ ಪ್ರದೇಶ, ಕೇರಳ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಭೂಕುಸಿತಗಳಾಗಿವೆ. ನೀರಿನ ಸಹಜವಾದ ಹರಿಯುವಿಕೆಗೆ ತಡೆ, ಜೀವ ವೈವಿಧ್ಯವುಳ್ಳ ಅರಣ್ಯ ತೆಗೆದು ನೆಡುತೋಪುಗಳಿಂದ ಭೂಕುಸಿತವಲ್ಲದೆ ಮಣ್ಣಿನ ಸವಕಳಿಗೂ ಕಾರಣವಾಗಿವೆ. ಪರಿಸರಕ್ಕೆ ತೀವ್ರ ಹಾನಿಯುಂಟು ಮಾಡುವ ಇಂತಹ ಮಾರಕ ಚಟುವಟಿಕೆ ತಡೆಯಲು ಸರ್ಕಾರಗಳು ಗಂಭೀರ ಪ್ರಯತ್ನ ಮಾಡುತ್ತಿಲ್ಲ. ದುರಂತ ಘಟಿಸಿದ ನಂತರ ಪರಿಹಾರ ನೀಡಿ ಜವಾಬ್ದಾರಿ ಮುಗಿಯಿತು ಎಂದು ಭಾವಿಸುವುದು ತಪ್ಪು ಎಂದರು.ಪಶ್ಚಿಮ ಘಟ್ಟ ಪ್ರದೇಶದ ಸೂಕ್ಷ್ಮತೆ ಮತ್ತು ಅದರ ಜಾಗತಿಕ ಮಹತ್ವ ಅಧ್ಯಯನ ಮಾಡಿ ಪ್ರೊ. ಮಾಧವ ಗಾಡೀಳ ಸಮಿತಿ ಸಲ್ಲಿಸಿದ ವರದಿಯಲ್ಲಿ ಹಾನಿ ಮಾಡುವ ಯಾವುದೇ ಚಟುವಟಿಕೆ ಅಲ್ಲಿ ಮಾಡಬಾರದು ಎಂದು ಹೇಳಲಾಗಿದೆ. ಆದರೂ ವರದಿ ಜಾರಿಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸೂಕ್ಷ್ಮ ಪರಿಸರ ವಲಯಗಳಲ್ಲಿ ಗಣಿಗಾರಿಕೆ, ಕಲ್ಲು ಮತ್ತು ಮರಳು ಗಣಿಗಾರಿಕೆ ನಿಷೇಧಿಸುವುದು, ಸೂಕ್ಷ್ಮ ಪರಿಸರ ವಲಯಗಳಲ್ಲಿ ಕಟ್ಟಡ ನಿರ್ಮಾಣ, ಮೂಲ ಸೌಕರ್ಯ ನಿರ್ಮಾಣ ನಿರ್ಬಂಧಿಸಲು ಕಠಿಣ ಕ್ರಮಕೈಗೊಳ್ಳಬೇಕು. ಜೀವ ಜಲ, ಪ್ರಮುಖ ನದಿಗಳು ಪಶ್ಚಿಮ ಘಟ್ಟದಲ್ಲಿ ಹುಟ್ಟಿದ್ದು ಅವುಗಳ ದಾರಿ ತಪ್ಪಿಸುವ ಕಾರ್ಯವಾಗಬಾರದು ಎಂಬುದು ನಮ್ಮ ಉದ್ದೇಶ. ಈಗಾಗುತ್ತಿರುವ ಅನಾಹುತಗಳಿಂದ ನಾವಿನ್ನೂ ಪಾಠ ಕಲಿಯದಿದ್ದರೆ ಅದಕ್ಕೆ ಕ್ಷಮೆಯಿಲ್ಲ. ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯುವ ಸಲುವಾಗಿ ಈ ಹೋರಾಟ ಎಂದು ಹೇಳಿದರು.