ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜಿಪಂ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಗದಿತ ಕಾಲಮಿತಿಯಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಬೇಕು. ಪ್ರವಾಹ ಪುನರ್ವಸತಿ ಕೇಂದ್ರಗಳಾಗಿ ಗುರುತಿಸಲ್ಪಟ್ಟ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಇತರೆ ಸರ್ಕಾರಿ ಕಟ್ಟಡಗಳ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಗಳನ್ನು ವಿಬಿ ಜಿ-ರಾಮ್ ಜಿ ಸೇರಿದಂತೆ ವಿವಿಧ ಯೋಜನೆಗಳೊಂದಿಗೆ ಸಂಯೋಜಿಸಿ ಕೈಗೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸೂಚಿಸಿದರು. ಇದರಿಂದ ಉಳಿಯುವ ಅನುದಾನವನ್ನು ಇತರೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ತಿಳಿಸಿದರು.
ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕ್ರೀಡೆ ಸೇರಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳು ನೈಜ ಅಗತ್ಯತೆ ಆಧರಿಸಿ ಅನುಷ್ಠಾನಗೊಳ್ಳಬೇಕು. ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಪಾರದರ್ಶಕತೆ ಕಾಪಾಡಿ ಅರ್ಹ ಫಲಾನುಭವಿಗಳನ್ನೇ ಆಯ್ಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾಪಟುಗಳು ಹಾಗೂ ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯಯೋಜನೆ ರೂಪಿಸುವಂತೆ ಹೇಳಿದರು.
ಸದರಿ ಕಾರ್ಯಕ್ರಮಗಳನ್ನು ಪರಿಶೀಲಿಸಿ ಸರ್ಕಾರದ ಮಾರ್ಗಸೂಚಿಗಳನ್ವಯ ಹಾಗೂ ನಿಯಮಾನುಸಾರ ಅನುಷ್ಠಾನಗೊಳಿಸುವಂತೆ ಸೂಚಿಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವೇತನ ಮತ್ತು ವೇತನೇತರ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಮಂಡಿಸಿದರು.
--------
2026- 27ನೇ ಸಾಲಿಗೆ ಜಿಪಂಗೆ ಒಟ್ಟು ₹421.70 ಕೋಟಿ ಅನುದಾನ ಹಂಚಿಕೆಯಾಗಿದೆ. ವೇತನ, ವೇತನೇತರ ವೆಚ್ಚ, ಎಸ್ಸಿಪಿ, ಟಿಎಸ್ಪಿ, ಸಾಮಗ್ರಿಗಳ ಖರೀದಿ, ಫಲಾನುಭವಿ ಆಧಾರಿತ ಯೋಜನೆಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಇಲಾಖಾವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ವಿವರಿಸಿದರು.
ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ, ಜಿಪಿಎಸ್ ಆಧಾರಿತ ಛಾಯಾಚಿತ್ರಗಳು ಹಾಗೂ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು.