ಒಳ ಮೀಸಲಾತಿ ಜಾರಿಗೆ ಕಾಲಹರಣದ ತಂತ್ರ: ಮಾರಸಂದ್ರ ಮುನಿಯಪ್ಪ

KannadaprabhaNewsNetwork |  
Published : Nov 29, 2024, 01:01 AM IST
ಮಾರಸಂದ್ರ ಮುನಿಯಪ್ಪ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸುತ್ತೇವೆ. ಆದರೆ, ದತ್ತಾಂಶ ಸಂಗ್ರಹಣೆ ನೆಪವೊಡ್ಡಿ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ. ಇದು ಕಾಲಹರಣ ಮಾಡುವ ತಂತ್ರವಾಗಿದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.

ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸುತ್ತೇವೆ. ಆದರೆ, ದತ್ತಾಂಶ ಸಂಗ್ರಹಣೆ ನೆಪವೊಡ್ಡಿ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ. ಇದು ಕಾಲಹರಣ ಮಾಡುವ ತಂತ್ರವಾಗಿದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಕಾಲಹರಣ ಮಾಡದೆ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಗುರುವಾರ ಸುದ್ಧಿಗೋಷ್ಠಿಯಲ್ಲಿ ಒತ್ತಾಯಿಸಿದರು. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳ ಜನಸಂಖ್ಯೆಗೆ ಸಂಬಂಧಪಟ್ಟ ಮಾಹಿತಿ ಹಾವನೂರು ಆಯೋಗದಿಂದ ಮೊದಲ್ಗೊಂಡು, ನ್ಯಾಯಮೂರ್ತಿ ಸದಾಶಿವ ಆಯೋಗ, ಕಾಂತರಾಜ್ ಆಯೋಗ, ನಾಗಮೋಹನ್‌ ದಾಸ್‌ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ಸಮಿತಿಗಳು ನೀಡಿದ ವರದಿಯಲ್ಲಿ ಲಭ್ಯವಿದೆ.

ಈ ವರದಿಗಳನ್ನು ಪರಿಗಣಿಸಿ ಸಮಸ್ಯೆ ಬಗೆಹರಿಸಲು ಸಾಧ್ಯವಿತ್ತು. 30 ವರ್ಷಗಳ ಹಿಂದೆಯೇ ಒಳ ಮೀಸಲಾತಿಗೆ ಸಂಬಂಧ ಪಟ್ಟ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದ ಕೂಡಲೇ ಅದನ್ನು ಬಗೆಹರಿಸಬಹುದಿತ್ತು. ಆದರೆ, ಈ ಸಮಸ್ಯೆಯನ್ನು ಜೀವಂತವಾಗಿ ಇಟ್ಟು, ನೂರೊಂದು ಜಾತಿಗಳ ಮಧ್ಯೆ ಅಪನಂಬಿಕೆ ಉಂಟು ಮಾಡಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಕುತಂತ್ರ ನಡೆಸಿದವು ಎಂದು ದೂರಿದರು.

ದೇಶದಲ್ಲಿ ಸರ್ಕಾರಿ ಹುದ್ದೆಗಳ ಖಾಸಗೀಕರಣದಿಂದಾಗಿ ಸರ್ಕಾರಿ ವಲಯದಲ್ಲಿ ಶೇ. 1ರಷ್ಟು ಮಾತ್ರ ಉದ್ಯೋಗಾವ ಕಾಶಗಳು ಸೃಷ್ಟಿಯಾಗುತ್ತಿವೆ. ಇನ್ನುಳಿದ ಶೇ. 99 ರಷ್ಟು ಉದ್ಯೋಗಾವಕಾಶ ಖಾಸಗಿ ವಲಯದಲ್ಲಿ ಸೃಷ್ಟಿಯಾಗುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ವಲಯದಲ್ಲಿಯೂ ಎಸ್ ಸಿ, ಎಸ್ ಟಿ, ಒಬಿಸಿ ಗಳು ಮೀಸಲಾತಿ ಪಡೆಯಬೇಕಾಗಿರುವುದು ಅನಿವಾರ್ಯವಾಗಿದೆ. ಇದಕ್ಕಾಗಿ ಎಲ್ಲರೂ ಸೇರಿ ಒಂದುಗೂಡಿ ಹೋರಾಟ ಮಾಡುವುದು ಇಂದಿನ ಅಗತ್ಯ ಎಂದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದಂತೆ ಅತಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ ಮೇಲ್ ಜಾತಿಗಳ ಒತ್ತಡಕ್ಕೆ ಮಣಿಯದೆ ರಾಜ್ಯ ಸರ್ಕಾರ ಕೂಡಲೇ ಕಾಂತರಾಜ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿ ಬಡವರನ್ನು ಬಡವರನ್ನಾಗಿಯೇ ಇಡುವ ಕೆಲಸ ಮಾಡುತ್ತಿದೆ. ಗ್ಯಾರಂಟಿ ನೀಡುವ ಬದಲು ಜನರಿಗೆ ಹಕ್ಕು ಪತ್ರಗಳನ್ನು ನೀಡಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಉತ್ತರ ಪ್ರದೇಶ ಹಾಗೂ ಬಿಹಾರ ಹೊರತುಪಡಿಸಿದರೆ ಕರ್ನಾಟಕದಲ್ಲಿಯೇ ಜಾತಿ ನಿಂದನೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಂಚಾಲಕ ಚಂದ್ರಪ್ಪ, ರಾಜ್ಯ ಸಂಚಾಲಕ ತಿರುಪತಿಹಳ್ಳಿ ದೇವರಾಜು, ಪ್ರಮುಖರಾದ ರಮೇಶ್, ರೇವಣ್ಣ, ಟಿ.ಆರ್. ವಿಜಯಕುಮಾರ್ ಉಪಸ್ಥಿತರಿದ್ದರು. 28 ಕೆಸಿಕೆಎಂ 5 ಮಾರಸಂದ್ರ ಮುನಿಯಪ್ಪ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''