ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ದಾರಿ ಫೌಂಡೇಷನ್ ಮೈಸೂರು ಹಾಗೂ ಮಂಡ್ಯ ವಿವಿಯಿಂದ ನಡೆದ ಭವಿಷ್ಯದಲ್ಲಿ ಪ್ರಜಾಪ್ರಭುತ್ವ ರಕ್ಷಣೆ, ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ ಎಂಬ ಮುಕ್ತ ಸಂವಾದ ಉದ್ಘಾಟಿಸಿ ಮಾತನಾಡಿದರು.
ಭಾರತದ ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಗೆ ಭದ್ರ ಬುನಾದಿಯಾಗಿದೆ. ಪ್ರತಿಯೊಬ್ಬ ಪ್ರಜೆಯ ಹಕ್ಕು, ಸ್ವಾತಂತ್ರ್ಯ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆಗೆ ಕಾನೂನುಬದ್ಧ ಭದ್ರತೆ ಒದಗಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಅಧಿಕಾರದ ಮೂಲ. ಹೀಗಾಗಿ ಪ್ರಜೆಗಳು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಹೊಂದಿರಬೇಕು ಎಂದರು.ಪ್ರಜಾಪ್ರಭುತ್ವದಲ್ಲಿ ಜನರು ರಾಜರಂತೆ ಅಧಿಕಾರ ಹೊಂದಿದರೆ, ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನಸೇವಕರಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರವು ಜನರ ಸೇವೆಗಾಗಿ ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು.
ಮಂಡ್ಯ ವಿವಿ ಕುಲ ಸಚಿವರಾದ ಕಲ್ಪಶ್ರೀ ಮಾತನಾಡಿ, ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮತದಾನದ ಹಕ್ಕು ಹೊಂದಿರುವವರು ಸಕ್ರಿಯವಾಗಿ ಮತದಾನ ಮಾಡುವುದು ಅತ್ಯಂತ ಮಹತ್ವದ್ದಾಗಿದೆ. 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕ-ಯುವತಿಯೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾನದ ಗುರುತಿನ ಚೀಟಿ (ವೋಟರ್ ಐಡಿ) ಪಡೆಯಬೇಕು ಎಂದರು.
ಮಂಡ್ಯ ವಿವಿ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ಮಾತನಾಡಿ, ಪ್ರಜಾಪ್ರಭುತ್ವದ ಆಶಯ ಹಾಗೂ ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯಗಳ ಕುರಿತು ಯುವಜನತೆ ಹೆಚ್ಚಿನ ಅರಿವು ಹೊಂದಬೇಕು. ದೇಶ ಸಂವಿಧಾನ ಗೌರವಿಸುವ ಜೊತೆಗೆ ನಮಗೆ ನೀಡಿರುವ ಹಕ್ಕುಗಳನ್ನು ಸಮರ್ಥವಾಗಿ ಬಳಸಿಕೊಂಡು ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದರು.