ಗ್ಯಾರಂಟಿ ನೀಡುವುದರ ಜೊತೆಗೆ ಎರಡು ವರ್ಷ ಆಡಳಿತ ಯಶಸ್ವಿ

KannadaprabhaNewsNetwork | Updated : Jun 01 2025, 03:33 AM IST
ಚುನಾವಣೆ ಸಮಯದಲ್ಲಿ ರಾಜ್ಯದ ಜನತೆಗೆ ಕೊಟ್ಟ ಭರವಸೆಯಂತೆ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 2 ವರ್ಷಗಳ ಆಡಳಿತ ಯಶಸ್ವಿಯಾಗಿ ಪೂರೈಸಿದೆ. ನಮ್ಮ ಸರ್ಕಾರದ ಗ್ಯಾರಂಟಿಗಳು ಬಡವರ ಪಾಲಿಗೆ ವರದಾನವಾಗಿವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
Follow Us

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಚುನಾವಣೆ ಸಮಯದಲ್ಲಿ ರಾಜ್ಯದ ಜನತೆಗೆ ಕೊಟ್ಟ ಭರವಸೆಯಂತೆ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 2 ವರ್ಷಗಳ ಆಡಳಿತ ಯಶಸ್ವಿಯಾಗಿ ಪೂರೈಸಿದೆ. ನಮ್ಮ ಸರ್ಕಾರದ ಗ್ಯಾರಂಟಿಗಳು ಬಡವರ ಪಾಲಿಗೆ ವರದಾನವಾಗಿವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಿಗೆ ಗುರುತಿನ ಚೀಟಿಗಳನ್ನು ವಿತರಿಸಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಸೌಲಭ್ಯಗಳನ್ನು ಎಲ್ಲಾ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪದೇ ಇರಲು ಕಾರಣ ಕಂಡು ಹಿಡಿದು ಪರಿಶೀಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ಮೂಲಕ ಅರ್ಹಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನುಸಿಗುವಂತೆ ಕ್ರಮವಹಿಸುವಂತೆ ತಿಳಿಸಿದರು. ನಿರುದ್ಯೋಗ ಯುವಕ ಯುವತಿಯರಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ, ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಉದ್ಧೇಶಕ್ಕಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪಂಚ ಗ್ಯಾರಂಟಿ ಯೋಜನೆಗಳು ಪ್ರಪಂಚಕ್ಕೆ ಮಾದರಿ ಆಗಿದ್ದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆ ಮೂಲಕ ಸುಮಾರು 400 ಕೋಟಿ ರು. ಕ್ಷೇತ್ರದ ಜನತೆ ಸೌಲಭ್ಯ ಪಡೆದಿದ್ದಾರೆ ಇದರಿಂದ ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಬಡಜನತೆಗೆ ವರದಾನವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಚ್.ಎಸ್.ನರೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪಂಚ ಗ್ಯಾರಂಟಿಗಳ ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಿದ ಘನತೆ ನಮ್ಮ ಕಾಂಗ್ರೆಸ್ ಸರ್ಕಾರದ್ದು. ಈಗಾಗಲೇ ರಚನೆ ಆಗಿರುವ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರು ಪ್ರತಿಯೊಂದು ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ವತಿಯಿಂದ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು. ತಾ.ಪಂ. ಇಒ ರಮೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸೋಮಶೇಖರ್, ಸುಬ್ಬರಾಮು, ಸಿ.ಆರ್.ರಮೇಶ್, ಸುಮಂಗಳಮ್ಮ, ಹುಬ್ಬಳಿ ಬಯ್ಯಪ್ಪ, ಮೂರ್ತಿ, ಶ್ರೀನಿವಾಸ್, ಡಿ.ಬಿ.ಆನಂದ್, ಮಂಜುನಾಥ, ಶ್ವೇತ, ಮಜಿಭ್, ಬಯ್ಯಾರೆಡ್ಡಿ, ರಾಘವೇಂಧ್ರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.