ಕನ್ನಡಪ್ರಭ ವಾರ್ತೆ ಮಡಿಕೇರಿ
ವಾರಾಂತ್ಯದಲ್ಲಿ ಮಡಿಕೇರಿಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಹೀಗೆ ಬರುವವರು ನೀರು ಕುಡಿದ ಬಳಿಕ ತಾವು ತರುವ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದ ಪ್ರತಿನಿತ್ಯ ನಗರದಲ್ಲಿ ಸಾವಿರಕ್ಕೂ ಅಧಿಕ ಕೆಜಿಯಷ್ಟು ಪ್ಲಾಸ್ಟಿಕ್ ಸಂಗ್ರಹವಾಗುತ್ತಿದೆ. ಇದನ್ನು ವಿಲೇವಾರಿ ಮಾಡಲು ಸಾಕಷ್ಟು ಸಮಸ್ಯೆಯಾಗುತ್ತಿದೆ.
ಇದರಿಂದ ನಗರದ ಸ್ವಚ್ಛತೆಯೂ ಹಾಳಾಗುತ್ತಿದೆ. ಅಲ್ಲದೇ ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರಕ್ಕೂ ಮಾರಕವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಮಡಿಕೇರಿ ನಗರಸಭೆ 2 ಲೀ.ಗಿಂತಲೂ ಕಡಿಮೆ ಪ್ರಮಾಣದ ತಾತ್ಕಾಲಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಪೂರ್ಣ ನಿಷೇಧಿಸಿದೆ.ಈಗಾಗಲೇ ನಗರದ ವರ್ತಕರಿಗೆ ಪ್ರಕಟಣೆ ಮೂಲಕ ನೋಟಿಸ್ ಕೊಡಲಾಗಿದೆ. ಜೊತೆಗೆ ಪ್ರತಿ ಅಂಗಡಿ ಮುಂಗಟ್ಟುಗಳಿಗೆ ಭಿತ್ತಿಪತ್ರ ಅಂಟಿಸಿ, ಪ್ಲಾಸ್ಟಿಕ್ ಬಾಟಲಿಗಳಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಖರೀದಿ ಮಾಡಿರುವ ಬಾಟಲಿಗಳ ಮಾರಾಟಕ್ಕೆ ಅವಕಾಶವಿದ್ದು, ಹೊಸದಾಗಿ ತರಿಸದಂತೆ ನಗರಸಭೆ ಸೂಚನೆ ನೀಡಿದೆ. ಮಡಿಕೇರಿ ನಗರಸಭೆಯ ನಿರ್ಧಾರವನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.