ಹನುಮಸಾಗರ: ಪಟ್ಟಣದ ಕೆಪಿಎಸ್ ಉರ್ದು ಶಾಲೆ ಹಾಗೂ ಮೌಲಾನಾ ಅಜಾದ್ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಹಾಲು ವಿತರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಪಾಲಕರು ಹಾಗೂ ಶಾಲಾ ಅಡುಗೆದಾರರ ನಡುವೆ ವಾಗ್ವಾದ ನಡೆಯಿತು.ಕೆಪಿಎಸ್ ಆವರಣದಲ್ಲಿ ನಡೆಯುತ್ತಿರುವ ಉರ್ದು ಶಾಲೆ ಹಾಗೂ ಮೌಲಾನಾ ಅಜಾದ್ ಶಾಲೆ ವಿದ್ಯಾರ್ಥಿಗಳಿಗೆ ಸರ್ಕಾರದ ಮಧ್ಯಾಹ್ನದ ಊಟ ಯೋಜನೆಯಡಿ ಬಿಸಿಯೂಟ ಹಾಗೂ ಹಾಲು ವಿತರಿಸಲಾಗುತ್ತಿದೆ. ಆದರೆ ಕೆಲವು ದಿನಗಳಿಂದ ಊಟ ಸರಿಯಾಗಿ ಸಿಗುತ್ತಿಲ್ಲ, ಪ್ರಮಾಣ ಕಡಿಮೆ ಇದೆ, ರುಚಿಕಟ್ಟಾಗಿ ತಯಾರಿಸಲಾಗುತ್ತಿಲ್ಲ ಹಾಗೂ ಸ್ವಚ್ಛತೆಯ ಕೊರತೆ ಇದೆ ಎಂದು ವಿದ್ಯಾರ್ಥಿಗಳು ಮತ್ತು ಪಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಮಕ್ಕಳ ಪೌಷ್ಟಿಕಾಂಶಕ್ಕಾಗಿ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿದೆ. ಆದರೆ ಶಾಲಾ ಮಟ್ಟದಲ್ಲಿ ಅಜಾಗರೂಕತೆ ನಡೆಯಬಾರದು. ಮಕ್ಕಳ ಆರೋಗ್ಯದ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅಡುಗೆ ಸ್ವಚ್ಛತೆಯಿಂದ, ರುಚಿಕಟ್ಟಾಗಿ ಮತ್ತು ಸಮರ್ಪಕ ಪ್ರಮಾಣದಲ್ಲಿ ತಯಾರಿಸಿ ನೀಡಬೇಕು ಎಂದು ಪಾಲಕರು ಆಗ್ರಹಿಸಿದರು.
ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಎಸ್ಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಪರಿಸ್ಥಿತಿ ತಿಳಿಗೊಳಿಸಿದರು. ಅಡುಗೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ಇನ್ನು ಮುಂದೆ ಈ ರೀತಿಯ ನಿರ್ಲಕ್ಷ್ಯ ನಡೆಯಬಾರದು, ಊಟದ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳ ಆರೋಗ್ಯವೇ ಮೊದಲ ಆದ್ಯತೆ ಎಂಬುದನ್ನು ಮನಗಾಣಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಯಿತು.ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿ ಊಟದ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸುವುದಾಗಿ ಹಾಗೂ ಯಾವುದೇ ದೂರು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.