
ಶಾಸಕ ಅಲ್ಲಮಪ್ರಭು ಚಾಲನೆ
-ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ
--ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಚಾಲನೆ ನೀಡಿದರು.ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ ಹಾಗೂ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ ಮಾಡಿದರು.
ರಾಕೇಶ ಚವ್ಹಾಣ, ಅರುಣಕುಮಾರ, ನಾಗರಾಜ, ಭೀಮರಡ್ಡಿ ಹಾಗೂ ಬಲಾನ ಗೌಡ ಅವರು ಕ್ರೀಡಾಜ್ಯೋತಿಯನ್ನು ಕ್ರೀಡಾಕೂಟದ ವೇದಿಕೆಗೆ ತಂದು ಒಪ್ಪಿಸಿದರು. ಸಂಘದ ಖಜಾಂಚಿ ಶ್ರೀಮಂತ ಪಟ್ಟೇದಾರ ಅವರು ಎಲ್ಲಾ ನೌಕರ ವರ್ಗದವರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಬಸವರಾಜ ಬಳೂಂಡಗಿ ಮಾತನಾಡಿ, ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ೨೦೫೦ ಮಂದಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವುದಾಗಿ ತಿಳಿಸಿದರು. “ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತೋಷದ ವಿಷಯ” ಎಂದು ಹೇಳಿದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಅನೇಕ ತೊಂದರೆಗಳ ನಡುವೆಯೂ ಸಮೀಕ್ಷೆಯನ್ನು ಯಶಸ್ವಿಗೊಳಿಸಿರುವುದನ್ನು ಅವರು ಶ್ಲಾಘಿಸಿದರು. “ಎರಡು ದಿನಗಳ ಕ್ರೀಡಾಕೂಟದಿಂದ ಮನಸ್ಸು ಸದೃಢವಾಗುತ್ತದೆ. ಅನೇಕರು ಖಾಲಿ ಹುದ್ದೆಗಳ ಪ್ರಭಾರದಲ್ಲಿಯೇ ಕೆಲಸ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿಗಳು ಅನುಕೂಲ ಮಾಡಿಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಹೂಗಾರ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆಶಾ ಹೆಗಡೆ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ವಿಭಾಗೀಯ ವೈದ್ಯಾಧಿಕಾರಿ ಡಾ. ಅಂಬರಾಯ ರುದ್ರವಾಡಿ, ಡಿಎಚ್ಒ ಡಾ. ಶರಣಬಸಪ್ಪ ಖ್ಯಾತನಾಳ, ಆರ್ಸಿಎಚ್ ಅಧಿಕಾರಿ ಸಿದ್ದು ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ್ವರ, ಗೌರವ ಅಧ್ಯಕ್ಷ ಸುರೇಶ ಎಲ್. ಶರ್ಮಾ, ರಾಜ್ಯ ಪರಿಷತ್ ಸದಸ್ಯ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷ ಎಂ.ಬಿ. ಪಾಟೀಲ, ಸುರೇಶ ವಗ್ಗೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಶಂಕರಯ್ಯ ಮಠಪತಿ, ಸಿದ್ಧಲಿಂಗಯ್ಯ ಮಠಪತಿ, ವಿಭಾಗೀಯ ಉಪಾಧ್ಯಕ್ಷ ನಿಜಲಿಂಗಪ್ಪ ಕೆ. ಕೋರಳ್ಳಿ, ವಿಭಾಗೀಯ ಉಪಾಧ್ಯಕ್ಷ ನಿಜಲಿಂಗಪ್ಪ ಮಾನ್ವಿ, ರಾಜ್ಯ ಕ್ರೀಡಾ ಕಾರ್ಯದರ್ಶಿ, ರಾಜ್ಯ ಪರಿಷತ್ ಸದಸ್ಯ ಸಂತೋಷ ಸಲಗರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಿ.ಕೆ.ರಾಜರತ್ನ,ಸೇರಿದಂತೆ ವಿವಿಧ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಜಿಲ್ಲೆಯ ಎಲ್ಲಾ ವೃಂದ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.