ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ರು. ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.
ಮಡಿಕೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ರು. ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ನಾಗೇಂದ್ರ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಅವರಿಗೆ ಇನ್ನೂ ಕ್ಲೀನ್ ಚಿಟ್ ಸಿಕ್ಕಿಲ್ಲ. ನಿರಪರಾಧಿ ಎಂದು ಸಾಬೀತಾದ ಬಳಿಕ ಸಚಿವರಾದರೆ ಅಭ್ಯಂತರವಿಲ್ಲ. ತನಿಖೆ ಪೂರ್ಣಗೊಳ್ಳುವ ಮುನ್ನವೇ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಖಂಡನೀಯ. ಇದು ಪರಿಶಿಷ್ಟ ಪಂಗಡಕ್ಕೆ ಮಾಡಿದ ದ್ರೋಹವಾಗಿದೆ. ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ ಎಂದು ಹೇಳಿದರು.
ನಾಗೇಂದ್ರ ಬಾಯಿ ಬಿಟ್ಟರೆ ಇಂದು ಉಳಿದ ನಾಯಕರು ಜೈಲು ಪಾಲಾಗುತ್ತಾರೆ. ಈ ಹಿನ್ನೆಲೆ ಆತನಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಲಾಗಿದೆ ಎಂದ ಅವರು, ವಾಲ್ಮಿಕಿ ಅಭಿವೃದ್ಧಿ ನಿಗಮದ ಹಣ ದಲಿತರ ಅಭಿವೃದ್ಧಿಗೆ ಬಳಕೆಯಾಗಬೇಕಿತ್ತು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ಸಚಿವ ನಾಗೇಂದ್ರ ವಿರುದ್ಧ ಆರೋಪ ಪಟ್ಟಿ ಇದ್ದರೂ ಮಂತ್ರಿ ಮಾಡಿರುವುದು ಪರಿಶಿಷ್ಟ ಪಂಗಡದವರಿಗೆ ಮಾಡಿದ ದ್ರೋಹವಾಗಿದೆ. ಯಾವ ನೈತಿಕತೆ ಮೇಲೆ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಲಾಗಿದೆ ಎಂಬುದಕ್ಕೆ ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಆಗ್ರಹಿಸಿದವರು.
ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಎಚ್.ಜಿ. ಸೋಮಶೇಖರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ, ಮಡಿಕೇರಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬೀನ್ ದೇವಯ್ಯ, ನಗರ ಮೋರ್ಚಾ ಅಧ್ಯಕ್ಷ ಉಮೇಶ್ ಸುಬ್ರಮಣಿ, ಎಸ್ಸಿ ಮೋರ್ಚಾದ ಅಧ್ಯಕ್ಷ ಪಿ.ಎಂ. ರವಿ, ವಕ್ತಾರ ತಳೂರು ಕಿಶೋರ್, ಜಿಪಂ ಮಾಜಿ ಅಧ್ಯಕ್ಷ ಬಿ.ಎ. ಹರೀಶ್, ಪ್ರಮುಖರಾದ ಡೀನ್ ಬೋಪಣ್ಣ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.