ಕ್ರಿಯಾ ಯೋಜನೆಯಲ್ಲಿ ಸಾರ್ವಜನಿಕರ ಬೇಡಿಕೆ ಅಳವಡಿಸಿ: ಸುಷಮಾ ಗೋಡಬೋಲೆ

KannadaprabhaNewsNetwork |  
Published : Jun 27, 2025, 12:48 AM IST
 ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ಮಾತನಾಡಿದುರ. | Kannada Prabha

ಸಾರಾಂಶ

ವಾರ್ಷಿಕ ಕ್ರಿಯಾ ಯೋಜನೆ ರೂಪಿಸುವಾಗ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಬೇಡಿಕೆಗಳನ್ನು ಇದರಲ್ಲಿ ಅಳವಡಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ಸೇವೆ ಒದಗಿಸಬೇಕು

ಕಾರವಾರ: ಜಿಪಂನಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಜಿಪಂ ಆಡಳಿತಾಧಿಕಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ನಿರ್ದೇಶನ ನೀಡಿದರು.

ಅವರು ಗುರುವಾರ ಜಿಪಂ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ಅಧಿಕಾರಿಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಬೇಕು ಅಲ್ಲಿನ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಗತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅಗತ್ಯ ನೆರವು ಒದಗಿಸಬೇಕು. ವಾರ್ಷಿಕ ಕ್ರಿಯಾ ಯೋಜನೆ ರೂಪಿಸುವಾಗ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಬೇಡಿಕೆಗಳನ್ನು ಇದರಲ್ಲಿ ಅಳವಡಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ಸೇವೆ ಒದಗಿಸಬೇಕು ಎಂದರು.

ಪ್ರಸ್ತುತ ಜಿಲ್ಲೆಯಲ್ಲಿನ 59 ಅಪೌಷ್ಟಿಕ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಪೌಷ್ಠಿಕರನ್ನಾಗಿ ಮಾಡುವಂತೆ ಹಾಗೂ ಈ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡುವಂತೆ ತಿಳಿಸಿದ ಅವರು, ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಪೌಷ್ಟಿಕ ಆಹಾರ ಘಟಕದ ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಹಾಸ್ಟೆಲ್‌ಗಳು, ವೈದ್ಯಕೀಯ ಕೇಂದ್ರಗಳಲ್ಲಿರುವ ಅನುಪಯುಕ್ತ ಸಾಮಗ್ರಿಗಳು/ಪೀಠೋಪಕರಣಗಳನ್ನು ನಿಯಮಾವಳಿಯಂತೆ ವಿಲೇವಾರಿ ಮಾಡಿ, ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಿ, ಕಚೇರಿಯಲ್ಲಿನ ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಂಗಡಿಸಿ ಸುಲಭವಾಗಿ ದೊರೆಯುವಂತೆ ಸಂರಕ್ಷಿಸಿಡುವಂತೆ ತಿಳಿಸಿದರು.

ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ನಿವೇಶನ ಲಭ್ಯವಿರುವ ಸ್ಥಳಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಮತ್ತು ಉಳಿದ ಕಡೆಗಳಲ್ಲಿ ಜಾಗ ಗುರುತಿಸುವ ಕಾರ್ಯ ಮಾಡುವಂತೆ ಸೂಚಿಸಿದ ಅವರು, ಎಲ್ಲಾ ಸರಕಾರಿ ಕಚೇರಿಗಳು ತಮ್ಮ ಕಟ್ಟಡಗಳ ಮೂಲ ದಾಖಲಾತಿಗಳನ್ನು ಮತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಿಡುವಂತೆ ತಿಳಿಸಿದರು.

ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ಮತ್ತು ಕ್ರೀಡಾ ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳಿಗೆ ಭೋದನಾ ಕಲಿಕೆಗೆ ಅಗತ್ಯವಿರುವ ಪುಸ್ತಕಗಳನ್ನು ಮತ್ತು ಸ್ಪರ್ದಾತ್ಮಕ ಪರೀಕ್ಷೆಗೆ ನೆರವಾಗುವ ಪುಸ್ತಕಗಳನ್ನು ಒದಗಿಸುವಂತೆ ಹಾಗೂ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಮಳೆಗಾಲದಲ್ಲಿ ಕಲುಷಿತ ನೀರು ಸೇವನೆಯ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸುವಂತೆ ಹಾಗೂ ನೀರಿನ ಮೂಲಗಳನ್ನು ನಿಗಧಿಯಂತೆ ಲ್ಯಾಬ್‌ಗಳಲ್ಲಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ ಅವರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಜಲಮೂಲಗಳ ಸಂರಕ್ಷಣೆ ಹಾಗೂ ಅವುಗಳ ಮರುಪೂರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲ ಇಲಾಖಾಧಿಕಾರಿಗಳು ತಮ್ಮ ಪ್ರವಾಸ ಸಂದರ್ಭದಲ್ಲಿ ಇತರೇ ಇಲಾಖೆಗಳಲ್ಲಿನ ಪ್ರದೇಶದಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಮೂಲಕ, ಪರಸ್ಪರ ಸಮನ್ವಯದಿಂದ ಜಿಲ್ಲೆಯ ಅಭಿವೃದ್ಧಿಗೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಪಂನ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಅನುಮೋದನೆ, 2025-26ರ ಆಯವ್ಯಯ ಮಂಡನೆ ಹಾಗೂ ಲಿಂಕ್ ಡಾಕ್ಯೂಮೆಂಟ್ ಅಡಿ ಜಿಪಂ ಅಧೀನ ಇಲಾಖೆಗಳಿಗೆ ಹಂಚಿಕೆಯಾದ ಅನುದಾನಕ್ಕೆ ಕ್ರಿಯಾ ಯೋಜನೆ ಅನುಷ್ಠಾನಗೊಳಿಸಲು ಅನುಮೋದನೆ ಪಡೆಯಲಾಯಿತು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಪಂ ಸಿಇಒ ಈಶ್ವರ ಕಾಂದೂ, ತರಬೇತಿ ನಿರತ ಐಎಎಸ್ ಅಧಿಕಾರಿ ಝುಪಿಶಾನ್ ಹಕ್, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ