ಕನ್ನಡಪ್ರಭ ವಾರ್ತೆ ತುಮಕೂರು
ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಾ ವೋಟ್ ಬ್ಯಾಂಕ್ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರದ ಈ ವೋಟ್ ಬ್ಯಾಂಕ್ ದೌರ್ಬಲ್ಯವನ್ನು ದುರ್ಬಳಕೆಯಿಂದ ಮತೀಯ ಗೂಂಡಾಗಳು ಗಣೇಶೋತ್ಸವದ ಮೇಲೆ ಕಲ್ಲು ತೂರುವುದು, ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಪಾದಿಸಿದರು. ನಗರದಲ್ಲಿ ಶುಕ್ರವಾರ ನಡೆದ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಭಾಗಿಯಾಗಿ, ನಂತರ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ. ಪೆಹಲ್ಗಾಮ್ ಘಟನೆಗೆ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯ ಎಂದು ಕಾಂಗ್ರೆಸ್ ನವರು ಆರೋಪಿಸಿದ್ದರು, ಪೂರ್ವಯೋಜಿತ ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ ಸರ್ಕಾರ, ಪೊಲೀಸ್ ಹಾಗೂ ಗುಪ್ತಚರ ಇಲಾಖೆ ವೈಫಲ್ಯವಾಗಿದೆ ಎಂದರು.
ಮದ್ದೂರಿನಲ್ಲಿ ಗಣೇಶೋತ್ಸವದಲ್ಲಿ ದಾಂಧಲೆ ಮಾಡಬೇಕೆಂದು ಪೂರ್ವಯೋಜಿತ ಸಂಚು ಮಾಡಿದ್ದರು. ಕಲ್ಲುಗಳನ್ನು ಮೊದಲೇ ಸಂಗ್ರಹಿಸಿದ್ದರು. ಈ ವಿಚಾರ ಪೊಲೀಸರು, ಗುಪ್ತಚರ ಇಲಾಖೆಗೆ ತಿಳಿದಿರಲಿಲ್ಲವೆ? ಎಂದು ಪ್ರಶಸ್ನಿಸಿದ ಅವರು, ಧರ್ಮಸ್ಥಳದ ಬುರುಡೆ ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಬಹಿರಂಗ ಪಡಿಸಿ, ಹಿಂದೂ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವ ಮತೀಯ ಗೂಂಡಾಗಳಿಗೆ ಕಾನೂನಿನ ಭಯ ಇಲ್ಲ, ಏನೇ ಮಾಡಿದರೂ ಕಾಂಗ್ರೆಸ್ ಸರ್ಕಾರ ತಮ್ಮ ರಕ್ಷಣೆಗಿದೆ ಎಂಬ ಕಾರಣಕ್ಕೆ ಅಲ್ಪಸಂಖ್ಯಾತ ಗೂಂಡಾಗಳು ದೌರ್ಜನ್ಯ ನಡೆಸುತ್ತಿದ್ದಾರೆ. ಸರ್ಕಾರ ಅಂತಹವರ ಹೆಡೆ ಮುರಿಕಟ್ಟಬೇಕು, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.ಚಾಮುಂಡೇಶ್ವರಿ ದೇವಿ ನೆಲೆಸಿರುವ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ ಎಂದು ಹೇಳುವ ಕಾಂಗ್ರೆಸ್ನವರು, ಅದನ್ನುಟಿಪ್ಪು, ಹೈದರಾಲಿ ಬೆಟ್ಟ ಮಾಡಲು ಹೊರಟಿದ್ದಾರೆಯೇ? ಇಂತಹ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ ಮಾಡುತ್ತದೆ. ಮುಂದೆ ರಾಜ್ಯದ ಜನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.