ಕನ್ನಡಪ್ರಭ ವಾರ್ತೆ ತುಮಕೂರುನಗರ ಸೇರಿದಂತೆ ಜಿಲ್ಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿ.ಪಂ. ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ವತಿಯಿಂದ ನಗರದಲ್ಲಿ 42 ಕಡೆ ಜ್ವರ ಚಿಕಿತ್ಸಾ ಕೇಂದ್ರಗಳನ್ನು ತೆರೆಯುತ್ತಿರುವ ಹಿನ್ನೆಲೆಯಲ್ಲಿ ಮನೆ ಮನೆ ಸರ್ವೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಚಾಲನೆ ನೀಡಿದರು.ಇಲ್ಲಿನ ಶಾಂತಿನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಈ ಮನೆ ಮನೆ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಕೆಲ ಮನೆಗಳಿಗೆ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತೆರಳಿದ ಜಿಲ್ಲಾಧಿಕಾರಿಗಳು, ಮನೆಯಲ್ಲಿ ಯಾರಿಗಾದರೂ ಆರೋಗ್ಯ ಸಮಸ್ಯೆ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.ನಂತರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಶಾಲೆಯಲ್ಲಿ ಮಕ್ಕಳ ಹಾಜರಾತಿ ಪುಸ್ತಕವನ್ನು ವೀಕ್ಷಿಸಿದರು. ಬಳಿಕ ತರಗತಿಯಲ್ಲಿರುವ ಮಕ್ಕಳನ್ನು ಭೇಟಿ ಮಾಡಿ ಮಾತನಾಡಿಸಿದಾಗ ನಯನ ಎಂಬ ವಿದ್ಯಾರ್ಥಿನಿ ಶಾಲೆಗೆ ಗೈರು ಹಾಜರಾಗಿರುವುದು ತಿಳಿದು ಬಂದಿತು.ತಕ್ಷಣ ಶಾಲೆಯಲ್ಲಿದ್ದ ಮತ್ತೋರ್ವ ವಿದ್ಯಾರ್ಥಿನಿಯನ್ನು ಜತೆಯಲ್ಲಿ ಗೈರು ಹಾಜರಾಗಿದ್ದ ನಯನ ಎಂಬ ವಿದ್ಯಾರ್ಥಿನಿಯ ಮನೆಗೆ ಜಿಲ್ಲಾಧಿಕಾರಿಗಳು ನಡೆದುಕೊಂಡೆ ಹೋಗಿ ನೋಡಿದಾಗ ಸದರಿ ವಿದ್ಯಾರ್ಥಿನಿ ಜ್ವರದಿಂದ ಬಳಲಿ ಮಲಗಿದ್ದ ದೃಶ್ಯ ಕಂಡು ಬಂತು.ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯ ತಂದೆ-ತಾಯಿ ಮಗಳಿಗೆ ಮಾತ್ರೆ ತಂದು ಕೊಟ್ಟು ನುಂಗಿಸಿ ಇಬ್ಬರೂ ಕೆಲಸಕ್ಕೆ ಹೋಗಿದ್ದರು. ಇದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ನಯನಳನ್ನು ನಿಮ್ಮ ಅಮ್ಮ, ಅಪ್ಪ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದಾಗ, ಅಮ್ಮ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದಾರೆ, ಅಪ್ಪನೂ ಸಹ ಕೆಲಸಕ್ಕೆ ಹೋಗಿದ್ದಾರೆ. ತಮ್ಮನ್ನನ್ನು ನೋಡಿಕೊಳ್ಳಲು ಶಾಲೆಗೆ ರಜೆ ಹಾಕಿ ಇಲ್ಲಿಯೇ ಇದ್ದಾನೆ ಎಂದು ತಿಳಿಸಿದಳು.ಈ ಮಾಹಿತಿಯನ್ನು ಪಡೆದ ಜಿಲ್ಲಾಧಿಕಾರಿಗಳು, ತಕ್ಷಣ ವಿದ್ಯಾರ್ಥಿನಿಯ ತಂದೆ-ತಾಯಿಗೆ ದೂರವಾಣಿ ಕರೆ ಮಾಡಿದರು. ಆದರೆ ಅವರು ಫೋನ್ ಕರೆ ಸ್ವೀಕರಿಸಲಿಲ್ಲ. ನಂತರ ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನರ್ಸಗಳನ್ನು ಕರೆಸಿ ಸ್ಥಳದಲ್ಲೇ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಪೋಷಕರು ಬಂದ ಮೇಲೆ ವಿಷಯ ತಿಳಿಸಿ, ಜಿಲ್ಲಾಸ್ಪತ್ರೆಗೆ ಮಗಳನ್ನು ಕರೆದೊಯ್ದು ದಾಖಲಿಸುವಂತೆಯೂ ತಿಳಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು.ವಿದ್ಯಾರ್ಥಿನಿ ಮನೆಗೆ ಆಗಮಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಜನಸಾಮಾನ್ಯರು ಡೆಂಘೀ ಜ್ವರವನ್ನು ಗಂಭೀರವಾಗಿ ಪರಿಗಣಿಸಬೇಕು. ಉದಾಸೀನ ಮಾಡದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.